ಮಾಣಿ: ಮಾಣಿ ಗ್ರಾಮ ಪಂಚಾಯತ್ ನ ಮಾಸಿಕ ಸಭೆಯನ್ನು ಪಂಚಾಯತ್ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆಯವರ ಸಮ್ಮುಖದಲ್ಲಿ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.
ಗತ ಸಭೆಯ ವರದಿ ಮತ್ತು ಲೆಕ್ಕ ಪತ್ರವನ್ನು ಸಭೆಯಲ್ಲಿ ಮಂಡಿಸಲಾಗಿದ್ದು, ಇಲಾಖಾವಾರು ವರದಿಯನ್ನು ಓದಿ ಹೇಳಲಾಯಿತು. ಇದರೊಂದಿಗೆ ಸಾರ್ವಜನಿಕ ಅರ್ಜಿಗಳನ್ನು ಪರಿಶೀಲಿಸಿ ಮಂಜೂರುಗೊಳಿಸಲಾಯಿತು.
ಸ್ವಚ್ಛತೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅಧ್ಯಕ್ಷರು, ಈಗಾಗಲೇ ಮಾಣಿ ಪೇಟೆಯ ಚರಂಡಿ, ಸುತ್ತಮುತ್ತಲಿನ ಪ್ರಮುಖ ರಸ್ತೆಗಳ ಬದಿಯ ಹುಲ್ಲು ಸೊಪ್ಪುಗಳನ್ನು ಹಾಗೂ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿದ್ದ ಕಸಗಳನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಮಾಡಲಾಗಿದೆ ಎಂದರು.
ಕೆಲವು ದಿನಗಳ ಹಿಂದೆ ನಡೆದ ಝೂಮ್ ಮೀಟಿಂಗ್ನಲ್ಲಿ ತಾಲೂಕು ಪಂಚಾಯತ್ ನ ಮಾನ್ಯ ಕಾರ್ಯನಿರ್ವಹಣಾಧಿಕಾರಿಯವರು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂಸ್ಥೆಯ ಒಕ್ಕೂಟದ ಸದಸ್ಯರಿಗೆ ತರಬೇತಿಯನ್ನು ನಡೆಸಿ, ವಾರದ ಸಂತೆಯಲ್ಲಿ ಮಳಿಗೆಯನ್ನು ಹಾಕಲು ಮತ್ತು ಸ್ವಚ್ಛತೆಯ ಬಗ್ಗೆ ಗಮನಹರಿಸಲು ಮನವರಿಕೆ ಮಡುವಂತೆ ತಿಳಿಯಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಸುದೀಪ್ ಕುಮಾರ್ ಶೆಟ್ಟಿ, ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ ತೋಟ, ರಮಣಿ.ಡಿ.ಪೂಜಾರಿ, ಸೀತಾ, ಸುಜಾತ, ಮಿತ್ರಾಕ್ಷಿ ಮತ್ತು ಪಂಚಾಯತ್ ಸಿಬ್ಬಂದಿಯವರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ ಸ್ವಾಗತಿಸಿ, ವಂದಿಸಿದರು.