ಉಡುಪಿ: ಕಾರು ನಿಯಂತ್ರಣ ತಪ್ಪಿ ಹಾಲಾಡಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಲಾಯಿಸುತ್ತಿದ್ದ ದ.ಕ ಹಾಲು ಒಕ್ಕೂಟದ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತಪಟ್ಟಿದ್ದಾರೆ.
ಶಂಕರನಾರಾಯಣದಿಂದ ಹಾಲಾಡಿ ಕಡೆಗೆ ತಮ್ಮ ಕಾರಿನಲ್ಲಿ ಸಾಗುತ್ತಿರುವಾಗ ನಿಯಂತ್ರಣ ತಪ್ಪಿದ ಕಾರು ಹಾಲಾಡಿ ಸೇತುವೆಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ಕರೆದೋಯ್ಯಲಾಯಿತಾದರೂ ಮಾರ್ಗಮಧ್ಯೆ ಅವರು ಅಸುನೀಗಿದರು. ಕಾರಿನಲ್ಲಿದ್ದ ಇನೋರ್ವರು ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಪ್ರಗತಿಪರ ಕೃಷಿಕರು, ಹೈನುಗಾರರು ಆಗಿದ್ದ ಅವರು ದ.ಕ ಹಾಲು ಒಕ್ಕೂಟದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಜಿ.ಪಂ ಸದಸ್ಯರಾಗಿ, ಶಂಕರನಾರಾಯಣ ಗ್ರಾ.ಪಂ. ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದರು. ಬಿಜೆಪಿಯ ಪ್ರಭಾವಿ ಮುಖಂಡರಾಗಿದ್ದರು.
ಮೃತರು ಜಿ.ಪಂ.ಮಾಜಿ ಸದಸ್ಯೆ ಮಮತಾ ಶೆಟ್ಟಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.