ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿಯ ರಚನೆ ಪತ್ತೆ ಹಿನ್ನೆಲೆಯಲ್ಲಿ ಪರಿಶೀಲನೆಗೆ ಕೋರ್ಟ್ ಕಮಿಷನರ್ ನೇಮಿಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.
ಮಂಗಳೂರಿನ ತೆಂಕಳೈಪಾಡಿ ಗ್ರಾಮದ ಧನಂಜಯ್ ಹಾಗೂ ಬಡುಗಳೈಪಾಡಿಯ ಮನೋಜ್ ಕುಮಾರ್ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಏಕಸದಸ್ಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತು.ಅರ್ಜಿದಾರರು ಹಾಗೂ ಪ್ರತಿವಾದಿಗಳ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ ತೀರ್ಪು ಕಾಯ್ದಿರಿಸಿರುವುದಾಗಿ ಪ್ರಕಟಿಸಿತು.
ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ವಿವೇಕ್ ಸುಬ್ಬಾರೆಡ್ಡಿ, “ಜ್ಞಾನವಾಪಿ ಮಾದರಿಯಲ್ಲಿಯೇ ಮಸೀದಿಯ ಒಳಗೆ ದೇವಾಲಯವಿತ್ತೋ, ಇಲ್ಲವೋ ಎಂಬ ಕುರಿತ ಸಾಕ್ಷ್ಯಗಳನ್ನು ಸ್ಥಳ ಸಮೀಕ್ಷೆ ನಡೆಸಿಯೇ ಸಂಗ್ರಹ ಮಾಡಬೇಕಿದೆ. ಅದಕ್ಕಾಗಿ ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ನೀಡಿದ್ದ ಆದೇಶದಂತೆ ಮಳಲಿ ಮಸೀದಿಯ ಪರಿಶೀಲನೆಗಾಗಿ ಕಮಿಷನರ್ ನೇಮಕ ಮಾಡುವ ಅಗತ್ಯವಿದೆ,” ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಅಲ್ಲದೆ,ವಕೀಲರು ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧ ಅರ್ಜಿ ಸಲ್ಲಿಕೆಯಾದಾಗಲೂ ಆ ಅರ್ಜಿಯ ಮಾನ್ಯತೆಯ ಪ್ರಶ್ನೆ ಎದುರಾಗಿತ್ತು. ಆದರೆ, ಕೋರ್ಟ್ ಮೊದಲು ಸ್ಥಳಪರಿಶೀಲನೆ ನಡೆಯಲಿ, ಅರ್ಜಿಯ ವಿಚಾರಣಾ ಮಾನ್ಯತೆ ಕುರಿತು ಮುಂದೆಯೂ ವಿಚಾರಣೆ ನಡೆಸಬಹುದು ಎಂದು ತಿಳಿಸಿ ಕಮಿಷನರ್ ನೇಮಕ ಮಾಡಿತ್ತು. ಹಾಗಾಗಿ ಮಳಲಿ ಮಸೀದಿ ವಿಚಾರದಲ್ಲೂ ಜ್ಞಾನವಾಪಿ ಮಸೀದಿ ಪ್ರಕರಣದಂತೆ ಅರ್ಜಿಯ ಮಾನ್ಯತೆಯ ವಿಷಯ ಬಿಟ್ಟು ಮೊದಲು, ಕಮಿಷನರ್ ನೇಮಕ ಮಾಡಬೇಕು ಎಂದು ಮನವಿ ಮಾಡಿದರು. ಆದರೆ ಮಸೀದಿ ಪರ ವಕೀಲರು, ಕೋರ್ಟ್ ಕಮೀಷನರ್ ನೇಮಕ ಅಗತ್ಯವಿಲ್ಲವೆಂದು ಪ್ರತಿಪಾದಿಸಿದರು.
ಮತ್ತೊಂದೆಡೆ, ಮೂಲ ದಾವೆದಾರರೂ ಮಧ್ಯಂತರ ಅರ್ಜಿ ಸಲ್ಲಿಸಿ, ಮೊದಲು ಕಮಿಷನರ್ ಒಬ್ಬರನ್ನು ನೇಮಕ ಮಾಡಿ ಪರಿಶೀಲನೆ ನಡೆಸುವಂತೆ ಕೋರಿದ್ದರು. ಆದರೆ, ಸಿವಿಲ್ ನ್ಯಾಯಾಲಯ ಮೊದಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿದೆ. ಹೈಕೋರ್ಟ್, ತನ್ನ ಬಳಿ ಇರುವ ಅರ್ಜಿ ಇತ್ಯರ್ಥವಾಗುವವರೆಗೆ ಯಾವುದೇ ಆದೇಶ ನೀಡಬಾರದೆಂದು ಮಧ್ಯಂತರ ಆದೇಶ ನೀಡಿದೆ.