ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳನ್ನು ತೆರೆದು ಮದುವೆ ಪ್ರಸ್ತಾಪ, ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಕುರುಬನಹಳ್ಳಿ ನಿವಾಸಿ ಪರಮೇಶ್ವರಪ್ಪ ರಂಗಪ್ಪ (23) ಬಂಧಿತ ಆರೋಪಿ. ಮ್ಯಾಟ್ರೊಮೊನಿಯಲ್ ನಲ್ಲಿ ಆರೋಪಿಯು ತಾನು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ಎಂಬುದಾಗಿ ಬಿಂಬಿಸಿ ಕೊಂಡಿದ್ದ. ಅಲ್ಲದೇ ಈ ಖರ್ತನಾಕ್ 20 ನಕಲಿ ಖಾತೆ ಸೃಷ್ಟಿಸಿ ಸರ್ಕಾರಿ ಇಲಾಖೆಗಳ ಉತ್ತಮ ದರ್ಜೆಯ ಅಧಿಕಾರಿಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಬೆಳೆಸಿದ್ದಾನೆ. ಇದನ್ನು ತನ್ನ ದಂಧೆಗೆ ಬಳಸಿಕೊಳ್ಳುತ್ತಿದ್ದ. ಈತ ಈ ವರೆಗೆ 13 ಮಂದಿಯನ್ನು ವಂಚಿಸಿದ್ದಾನೆ ಎಂದು ಪೊಲೀಸರು ಮಾಹಿತಿನೀಡಿದ್ದಾರೆ.
ಇನ್ನು ಈ ಪ್ರಕರಣಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ಸೈಬರ್ ಕ್ರೈಂ ಪೊಲೀಸರು, ತನಿಖೆ ನಡೆಸಿ ಆರೋಪಿಯನ್ನು ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಲ್ಯಾಪ್ ಟಾಪ್, ಐದು ಮೊಬೈಲ್ ಗಳು, ಅಂಚೆ ಇಲಾಖೆಯ ನಕಲಿ ಗುರುತಿನ ಚೀಟಿ, ಐಸಿಐಸಿಐ ಬ್ಯಾಂಕ್ ನ ಡೆಬಿಟ್ ಕಾರ್ಡ್ ವೊಂದನ್ನು ವಶಕ್ಕೆ ಪಡೆಯಲಾಗಿದೆ. ಸ್ವಾಧೀನಪಡಿಸಿಕೊಳ್ಳಲಾದ ವಸ್ತುಗಳ ಸೊತ್ತಿನ ವೌಲ್ಯ 1.35 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.