ಬಂಟ್ವಾಳ: ಮಹಿಳೆಯನ್ನು ಅಡ್ಡಗಟ್ಟಿ ಅನುಚಿತವಾಗಿ ವರ್ತಿಸಿ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಅಶ್ರಫ್ (33) ಬಂಧಿತ ಆರೋಪಿ.
ಸಂತ್ರಸ್ತ ಮಹಿಳೆಯು ದಿನಾಂಕ:03-09-2025 ರಂದು ಸಂಜೆ, ಬೈಕ್ ನಲ್ಲಿ ತನ್ನ ಮಗನನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿದ್ದಾಗ, ಮನೆಯ ಸಮೀಪ ತಲುಪುತ್ತಿದ್ದಂತೆ, ಆರೋಪಿ ಅಶ್ರಫ್ ಎಂಬಾತ ಕತ್ತಿಯನ್ನು ಹಿಡಿದುಕೊಂಡು ಬಂದು ಸ್ಕೂಟರಿನಲ್ಲಿದ್ದ ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿ, ಕತ್ತಿಯಿಂದ ಹಲ್ಲೆಗೆ ಯತ್ನಿಸಿರುತ್ತಾನೆ. ಈ ವೇಳೆ ಮಹಿಳೆಯ ಬೆರಳುಗಳಿಗೆ ತೀವ್ರ ಸ್ವರೂಪದ ರಕ್ತಗಾಯವಾಗಿರುತ್ತದೆ. ಈ ವೇಳೆ ಬೊಬ್ಬೆ ಕೇಳಿ ಮಹಿಳೆಯ ತಾಯಿ ಹಾಗೂ ನೆರೆಕೆರೆಯವರು ಓಡಿ ಬರುತ್ತಿರುವುದನ್ನು ಕಂಡು ಆರೋಪಿಯು ಜೀವ ಬೆದರಿಕೆ ಹಾಕಿ ತೆರಳಿರುತ್ತಾನೆ. ಹಲ್ಲೆಯಿಂದಾದ ಗಾಯಗಳಿಗೆ ಮಹಿಳೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ.
ಮಹಿಳೆ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆರೋಪಿ ಅಶ್ರಫ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.


