ಕಡಬ; ಮಾದಕ ವಸ್ತು ಮಾರಾಟಕ್ಕೆತೆರಳುತ್ತಿದ್ದಾತನನ್ನು ಪೊಲೀಸರು ಬಂಧಿಸಿರುವ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಉಪ್ಪಿನಂಗಡಿ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಕಡಬ ತಾಲೂಕು ಕೌಕ್ರಾಡಿ ಗ್ರಾಮದ ದೋಂತಿಲ ನಿವಾಸಿ ತೌಫಿಕ್ (22) ಬಂಧಿತ ಯುವಕ. ಈತ ನ.30ರಂದು ಬೆಳಗ್ಗೆ 11.15ಕ್ಕೆ ಆಟೋ ರಿಕ್ಷಾ ಚಲಾಯಿಸಿಕೊಂಡು ಬಂಟ್ವಾಳ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿ ಪೊಲೀಸರು ನಿಲ್ಲಿಸುವಂತೆ ಸೂಚಿಸಿದರೂ ನಿಲ್ಲಿಸದೇ ಮುಂದಕ್ಕೆ ಚಲಾಯಿಸಿ ರಿಕ್ಷಾದಿಂದ ಇಳಿದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಎನ್ನಲಾಗಿದೆ.
ಪೊಲೀಸರು ಹಿಡಿದು ವಿಚಾರಿಸಿದಾಗ ಎಂಡಿಎಂಎಎಂಬ ಮಾದಕ ವಸ್ತು ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೆ ತನ್ನಲ್ಲಿ ಮಾದಕ ವಸ್ತುವಾದ ಎಂಡಿಎಂಎ ಒಂದು ಪ್ಯಾಕೇಟ್ ಇದ್ದು, ಅದನ್ನು ಸ್ನೇಹಿತ ಪೆರ್ನೆ ಸಲೀಂ ಎಂಬಾತ ನೀಡಿದ್ದು, ಇದನ್ನು ಗಿರಾಕಿಗಳಿಗೆ ಮಾರಾಟ ಮಾಡಲು ತೆರಳುತ್ತಿರುವುದಾಗಿ ತಿಳಿಸಿದ್ದಾನೆ.ಆರೋಪಿಯನ್ನು ಬಂಧಿಸಿ ಮಾದಕ ವಸ್ತು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.