ಬೆಳ್ತಂಗಡಿ : ಕೇವಲ ನೂರು ರೂಪಾಯಿಗಾಗಿ ಗಂಡ ಹೆಂಡತಿ ಮಧ್ಯೆ ಜಗಳ ನಡೆದು ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳ್ತಂಗಡಿ ಬಂಟ್ವಾಳದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ(47) ಮಂಗಳೂರಿನ ಹೊಟೇಲ್ನಲ್ಲಿ ಕುಕ್ಕರ್ ಅಗಿ ಕೆಲಸ ಮಾಡುತ್ತಿರು. ದಿನಾಂಕ 31-01-2022 ರಂದು ಅವರು ಕೆಲಸ ಮುಗಿಸಿ ಮನೆಗೆ ಬಂದ ಅವರು 8 ಸಾವಿರ ರೂಪಾಯಿ ಸಂಬಳವನ್ನು ಪತ್ನಿ ಪ್ರೇಮಾ ಅವರ ಕೈಗೆ ನೀಡಿದ್ದಾರೆ. ಬಳಿಕ ನೂರು ರೂಪಾಯಿ ಕೇಳಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದು ಪ್ರೇಮಾ ಅವರನ್ನು ಅದನ್ನು ತನ್ನ ಅಣ್ಣ ಬಂಟ್ವಾಳದ ಮಣಿನಾಲ್ಕೂರು ಅಶೋಕ್ @ ಚಂದಪ್ಪ (45) ಪೂಜಾರಿಗೆ ಕರೆ ಮಾಡಿ ತಿಳಿಸಿದ್ದಾರೆ.
ಮನೆಗೆ ಬಂದ ಅಶೋಕ್ @ ಚಂದಪ್ಪ ಪೂಜಾರಿ ಕೇಶವ ಪೂಜಾರಿ ಅವರಿಗೆ ಮಾರಣಾಂತಿಕ ಹಲ್ಲೆ ನಡೆಸಿ ಹೋಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಕೇಶವ ಪೂಜಾರಿಗೆ ವಿಪರೀತ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಇವರನ್ನು ಅವರ ತಾಯಿ ಲೀಲಾ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಔಷಧಿ ಪಡೆದು, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡುವುದಕ್ಕೆ ತೆರಳಿದ್ದಾರೆ. ಆದರೆ ಅಲ್ಲಿ ಪೊಲೀಸರು ದೂರು ದಾಖಲಿಸಿಕೊಳ್ಳದೇ ಲೀಲಾ ಅವರನ್ನು ಬೈದು ವಾಪಾಸ್ಸು ಕಳುಹಿಸಿದ್ದಾರೆ ಎನ್ನಲಾಗಿದೆ.
ಔಷಧಿ ಸೇವಿಸುತ್ತಾ ಮನೆಯಲ್ಲೇ ಇದ್ದ ಕೇಶವ ಪೂಜಾರಿ ಅವರಿಗೆ ದಿನಾಂಕ 8-02-2022 ರಂದು ತೀವ್ರ ಅನಾರೋಗ್ಯ ಕಾಣಿಸಿಕೊಂಡಿದೆ. ಕೂಡಲೇ ಅವರ ಮನೆಯಲ್ಲಿದ್ದ ಶಾರದ ಹಾಗೂ ದಿನೇಶ್ ಎಂಬವರು ಬಂಟ್ವಾಳ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ. ಈ ವಿಚಾರ ಅಕ್ಕಪಕ್ಕದ ಮನೆಯವರಿಗೆ ಗೊತ್ತಾಗಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ಅವರಿಗೆ ಕರೆ ಮಾಡಿ ನಡೆದ ಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರು ಪುಂಜಾಲಕಟ್ಟೆ ಪೊಲಿಸರಿಗೆ ಮಾಹಿತಿ ನೀಡಿ ಶವಪರೀಕ್ಷೆ ಮಾಡಿಸಲು ಸೂಚಿಸಿದ್ದಾರೆ. ಅದರಂತೆ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಮೃತದೇಹದ ಶವಪರೀಕ್ಷೆ ಮಾಡಿಸಿದಾಗ ಹಲ್ಲೆಯಿಂದ ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂಬುವುದು ಗೊತ್ತಾಗಿದೆ.
ಅದರಂತೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ಮತ್ತು ತಂಡ ಆರೋಪಿಯನ್ನು ದಿನಾಂಕ 21-02-2022 ರಂದು ಮಧ್ಯಾಹ್ನ ಖಚಿತ ಮಾಹಿತಿ ಮೇರೆಗೆ ಮಂಗಳೂರಿನ ಬಜಪೆ ವ್ಯಾಪ್ತಿಯ ಹೊಟೇಲ್ನಲ್ಲಿ ಅವರು ಕೆಲಸ ಮಾಡುತ್ತಿದ್ದಾಗಲೇ ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಹಸ್ತಾಂತರ ಮಾಡಿದ್ದು, ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.