ಕಡಬ; ಕೆಲಸಕ್ಕೆಂದು ಹೋದ ಯುವಕ ನಾಪತ್ತೆಯಾಗಿದ್ದು ಕೊಲೆಯಾಗಿರುವ ಶಂಕೆ ಹಿನ್ನೆಲೆ ಪೊಲೀಸರು ಯುವಕನೊಬ್ಬನನ್ನು ವಿಚಾರಣೆ ನಡೆಸುತ್ತಿರುವ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ಕೆಲಸಕ್ಕೆಂದು ಹೋದವನು ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದಾನೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ. 27ರಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೋದ ಸಂದೀಪ್ ಕೆಲಸ ಮುಗಿಸಿ ಸಂಜೆ ಮನೆಗೆ ಬಂದಿಲ್ಲ . ಈ ಬಗ್ಗೆ ವಿನಯ ಅವರಲ್ಲಿ ವಿಚಾರಿಸಿದಾಗ ಸಂದೀಪ್ ನೆಟ್ಟಣ ನಿವಾಸಿ ಪ್ರತೀಕ್ನೊಂದಿಗೆ ಕಾರಿನಲ್ಲಿ ಹೋಗಿರುವುದಾಗಿ ತಿಳಿಸಿದ್ದಾರೆ.ಸಂದೀಪ್ ಆ ದಿನ ಮನೆಗೆ ಬಾರದೇ ಇದ್ದಾಗ ನೆರೆಹೊರೆಯವರಲ್ಲಿ ಹಾಗೂ ಸಂಬಂಧಿಕರ ಮನೆಯಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಸರೋಜಾ ಅವರು ಕಡಬ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.
ಸಂದೀಪ್ನನ್ನು ಕಾರಿನಲ್ಲಿ ಕರೆದೊಯ್ದಿದ್ದಾನೆ ಎನ್ನಲಾಗಿರುವ ಪ್ರತೀಕ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಕೊಲೆ ಶಂಕೆಯನ್ನು ವ್ಯಕ್ತಪಡಿಸಲಾಗಿದ್ದು, ಸ್ಥಳೀಯರು ಹಾಗೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಅಲ್ಲದೇ ಸ್ಥಳೀಯರು ಪೊಲೀಸರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಪ್ರತೀಕ್ ಗಾಂಜಾ ವ್ಯಸನಿಯಾಗಿದ್ದು ಆತನೇ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.