ಮಂಗಳೂರು: ಕುಡಿದು ಫುಲ್ ಟೈಟ್ ಆಗಿ ಇಬ್ಬರು ಕಾರ್ಮಿಕರ ನಡುವೆ ಗಲಾಟೆ ನಡೆದು ಅದು ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಣ್ಣೀರು ಬಾವಿ ಟ್ರೀ ಪಾರ್ಕ್ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ಕೇರಳದ ಕೊಲ್ಲಂ ನಿವಾಸಿ ಬಿನು( 41) ಮೃತ ದುರ್ದೈವಿ. ಕೇರಳದ ಕಣ್ಣೂರು ಜಿಲ್ಲೆಯ ತಳಿಪ್ಪರಂಬ್ ನಿವಾಸಿ ಜಾನ್ಸನ್ ಯಾನೆ ಬಿನೋಯ್ (52) ಕೊಲೆಗೈದಾತ.
ಮೃತ ಬಿನು ಮತ್ತು ಜಾನ್ಸನ್ ಯಾನೆ ಬಿನೋಯ್ ತಣ್ಣೀರುಬಾವಿಯ ಟ್ರೀ ಪಾರ್ಕ್ ಬಳಿಯ ದೋಣಿ ನಿರ್ಮಾಣ ಸಂಸ್ಥೆಯಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಅದೇ ಪರಿಸರದಲ್ಲಿ ಬೇರೆ ಬೇರೆ ವಸತಿಯಲ್ಲಿ ವಾಸವಾಗಿದ್ದರು.
ಯಾವುದೋ ವೈಯಕ್ತಿಕ ವಿಚಾರವಾಗಿ ಇಬ್ಬರ ನಡುವೆ ಶನಿವಾರ ರಾತ್ರಿ ಜಗಳವಾಗಿತ್ತು. ಇದೇ ದ್ವೇಷದಿಂದ ಮದ್ಯ ಸೇವಿಸಿ ಬಂದಿದ್ದ ಜಾನ್ಸನ್ ಯಾನೆ ಬಿನೋಯ್ ಬಿನುಗೆ ಚೂರಿ ಇರಿದು ಕೊಲೆ ಗೈದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೊಲೆ ಆರೋಪಿ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಪಣಂಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.