ಮಂಗಳೂರು: ಮಂಗಳೂರು ಇಂಟರ್ ನ್ಯಾಷನಲ್ ಏರ್ ಪೋರ್ಟ್ ನಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣದ ಆರೋಪಿ ಆದಿತ್ಯ ರಾವ್ ಗೆ ಶಿಕ್ಷೆ ಪ್ರಕಟವಾಗಿದೆ. ಶಿಕ್ಷೆ ವಿಧಿಸಿ ಮಂಗಳೂರಿನ ನಾಲ್ಕನೇ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಪ್ರಕಟಗೊಂಡಿದೆ.
ಈ ಪ್ರಕರಣದಲ್ಲಿ ಪ್ರತ್ಯೇಕ ಎರಡು ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಪ್ರಕಟಿಸಿದೆ. ಒಂದು ಸೆಕ್ಷನ್ ನಡಿ 20 ವರ್ಷ ಜೈಲು ಮತ್ತು 10 ಸಾವಿರ ರೂಪಾಯಿ ದಂಡ ವಿಧಿಸಿದ್ದರೆ, ಮತ್ತೊಂದು ಸೆಕ್ಷನ್ ನಡಿ 5 ವರ್ಷ ಜೈಲು ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿದೆ.
2020ರ ಜನವರಿ 20ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆದಿತ್ಯ ರಾವ್, ಜನವರಿ 22ರಂದು ಬೆಂಗಳೂರಿನಲ್ಲಿ ಪೊಲೀಸರಿಗೆ ಶರಣಾಗಿದ್ದ.
ಉಡುಪಿ ಜಿಲ್ಲೆಯ ಮಣಿಪಾಲ ಮೂಲದ ಆದಿತ್ಯ ರಾವ್, ಮೆಕ್ಯಾನಿಕಲ್ ಎಂಜಿನಿಯರ್ ಪದವೀಧರ. 2018ರಲ್ಲಿ ಬೆಂಗಳೂರು ಏರ್ ಪೋರ್ಟ್ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದ ಅದಿತ್ಯ ರಾವ್, ಆದರೆ ಸೂಕ್ತ ದಾಖಲೆಗಳು ಇಲ್ಲದ ಕಾರಣ ಅರ್ಜಿ ತಿರಸ್ಕೃತಗೊಂಡಿತ್ತು. ಮಂಗಳೂರು ಏರ್ ಪೋರ್ಟ್ ಗೆ ಬಾಂಬ್ ಇಟ್ಟಿದ್ದ ಪ್ರಕರಣ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು.