ಬಂಟ್ವಾಳ: ಶಾಲೆಗಳಲ್ಲಿ ಪುಟಾಣಿ ಮಕ್ಕಳನ್ನು ಸ್ವಾಗತಿಸುವ ಕಾರ್ಯಕ್ರಮ ವರ್ಷಂಪ್ರತಿ ಅದ್ದೂರಿಯಾಗಿ ನಡೆಯುತ್ತಿದ್ದು, ಈ ವರ್ಷ ಕೊರೋನದಿಂದಾಗಿ ಇದು ಸಾಧ್ಯವಾಗಲಿಲ್ಲ. ಸರಳವಾಗಿಯಾದರೂ ಅರ್ಥಪೂರ್ಣ ಕಾರ್ಯಕ್ರಮವಾಗಿ ಮೂಡಿಬಂದಿದೆ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.
ಮಾಣಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಪುಟಾಣಿ ಮಕ್ಕಳನ್ನು ಸ್ವಾಗತಿಸುವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಕಲಿತ ಹಲವಾರು ಮಂದಿ ಬೇರೆಬೇರೆ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಮಾಡಿದ್ದಾರೆ. ನಮ್ಮೂರಿನ ಶಾಲೆಯನ್ನು ಉಳಿಸಲು ಜನಪ್ರತಿನಿಧಿಗಳು, ಸಂಘಸಂಸ್ಥೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಪುಟಾಣಿ ಮಕ್ಕಳು ತಮ್ಮ ಪೋಷಕರೊಂದಿಗೆ ಆಗಮಿಸಿದ್ದರು. ಅವರನ್ನು ಪಂಚಾಯತ್ ಅಧ್ಯಕ್ಷರು ಮತ್ತು ಗಣ್ಯರು ಗುಲಾಬಿ ಹೂವನ್ನು ನೀಡಿ ಸ್ವಾಗತಿಸಿದರು.ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್, ಗ್ರಾಮ ಪಂಚಾಯತ್ ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿನ್, ನಾರಾಯಣ ಶೆಟ್ಟಿ ತೋಟ, ಸೀತಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಮಾಣಿ, ಉಪಾಧ್ಯಕ್ಷೆ ಶಶಿಕಲಾ, ಮುಖ್ಯೋಪಾಧ್ಯಾಯಿನಿ ಚಂದ್ರಾವತಿ, ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು. ಸಹಶಿಕ್ಷಕಿ ಶೀಲಾವತಿ ಸ್ವಾಗತಿಸಿ, ಚಿತ್ರಾಕ್ಷಿ ವಂದಿಸಿದರು.