ಬಂಟ್ವಾಳ: ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೋನಾ ಬಾಧಿಸಿದ ಮನೆಗಳಿಗೆ ಭೇಟಿ ನೀಡುವ ಮೂಲಕ ಅವರ ಸಮಸ್ಯೆಗಳನ್ನು ಬಗೆಹರಿಸುವುದು, ಜನನಿಬಿಡ ಪ್ರದೇಶಗಳಲ್ಲಿ ಸಾಮೂಹಿಕವಾಗಿ ಕೋವಿಡ್ ಪರೀಕ್ಷೆಯನ್ನು ಮಾಡುವುದು ಇನ್ನಿತರ ಕಾರ್ಯಕ್ರಮಗಳ ಮೂಲಕ ನಮ್ಮ ಗ್ರಾಮವನ್ನು ಕೊರೋನಮುಕ್ತ ಮಾಡುವಲ್ಲಿ ಶ್ರಮಿಸಲಾಗುತ್ತಿದೆ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.
ಅವರು ಪಂಚಾಯತ್ ಸಭಾಂಗಣದಲ್ಲಿ ಜರಗಿದ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋವಿಡ್ ಲಸಿಕೆಗೆ ಸಂಬಂಧಪಟ್ಟ ಹಾಗೆ ಗ್ರಾಮದಲ್ಲಿ ಸಮೀಕ್ಷೆಯನ್ನು ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮದ ಪ್ರತಿಯೊಬ್ಬರೂ ಲಸಿಕೆ ಪಡೆದುಕೊಳ್ಳುವ ಹಾಗೆ ಮಾಡಲಾಗುವುದು ಎಂದರು.
ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್ ಮಾತನಾಡಿ, ಕೋವಿಡ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ಮಾಣಿ ಗ್ರಾಮ ಪಂಚಾಯತ್ ಟಾಸ್ಕ್ ಫೋರ್ಸ್ ಸಮಿತಿ ಕೈಗೊಂಡ ಕಾರ್ಯ ನಿಜಕ್ಕೂ ಶ್ಲಾಘನೀಯ. ಗ್ರಾಮದ ಜನರ ಜೊತೆ ನಿಕಟ ಸಂಪರ್ಕವನ್ನು ಇಟ್ಟುಕೊಂಡು ಸಮಸ್ಯೆ ಉಲ್ಬಣಿಸದಂತೆ ಪ್ರಯತ್ನಿಸಲಾಗಿದೆ ಎಂದು ಹೇಳಿದರು.