
ಉಡುಪಿ: ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿ ಹಾಗೂ ಇದರ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಮಣಿಪಾಲದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಮಣಿಪಾಲದ ಕಾಯಿನ್ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಜಾಥಾ ನಡೆಸಿದ ವಿದ್ಯಾರ್ಥಿಗಳು, ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ಶಿಕ್ಷಣ ಸಚಿವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಘೋಷಣೆಗಳನ್ನು ಕೂಗಿದರು. ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಅವರು, ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿ ಕರಪತ್ರಗಳನ್ನು ಪ್ರದರ್ಶಿಸಿದರು.
ಇದೇ ವೇಳೆ, ಈ ಅಕ್ರಮ ಮತ್ತು ಗೊಂದಲಗಳಿಂದ ಮನನೊಂದು ಜೀವ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಮೌನಾಚರಣೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೋಹನ್ ಮಚದೋ ಮಾತನಾಡಿ, ವರ್ಷಗಟ್ಟಲೆ ಶ್ರಮಪಟ್ಟು ಪರೀಕ್ಷೆಗೆ ಸಿದ್ಧರಾಗುವ ವಿದ್ಯಾರ್ಥಿಗಳ ಭವಿಷ್ಯಕ್ಕೆ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಕತ್ತಲೆ ಆವರಿಸಿದೆ, ಇದಕ್ಕೆ ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ ಎಂದು ಕಿಡಿಕಾರಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ನಾಯಕಿ ಜೂನ್ ಮೆಹತಿ ಕೊಲ್ಕತ್ತಾ, ಸಹಬಾಳ್ವೆ ಅಧ್ಯಕ್ಷ ಪ್ರೊ. ಕೆ. ಫಣಿರಾಜ್, ವಿಶ್ವಾಸ್ ಅಮೀನ್, ದಲಿತ ಸಂಘರ್ಷ ಸಮಿತಿಯ ಶ್ಯಾಮ್ರಾಜ್ ಬಿರ್ತಿ, ಪ್ರಶಾಂತ್ ಬಿರ್ತಿ, ಪ್ರಕಾಶ್ ಹೇರೂರು ಹಾಗೂ ಎಸ್ಐಒ ಜಿಲ್ಲಾಧ್ಯಕ್ಷ ಅಯಾನ್ ಮಲ್ಪೆ ಸೇರಿದಂತೆ ಹಲವು ಸಂಘಟನೆಗಳ ನಾಯಕರು ಮತ್ತು ನೂರಾರು ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿದ್ದರು.


