ಬೆಂಗಳೂರು;ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಅವರು
ರಾಜೀನಾಮೆ ನೀಡಿದ್ದಾರೆ.
ಮೌಲಾನ ಎನ್.ಕೆ.ಮುಹಮ್ಮದ್ ಶಾಫಿ ಸಅದಿ ಅವರು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಇಲಾಖೆಯ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಹಸ್ತಾಂತರ ಮಾಡಿದ್ದು, ವಕ್ಫ್ ಬೋರ್ಡ್ಗೆ ನೂತನ ಅಧ್ಯಕ್ಷರ ಆಯ್ಕೆಯಾಗುವವರೆಗೆ ಅವರು ಹಂಗಾಮಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.
ಡಾ.ಮುಹಮ್ಮದ್ ಯೂಸುಫ್ ನಿಧನದ ಬಳಿಕ ಒಂದು ವರ್ಷ ವಕ್ಫ್ ಬೋರ್ಡ್ಗೆ ಅಧ್ಯಕ್ಷರ ಆಯ್ಕೆಯಾಗಿರಲಿಲ್ಲ. ಆನಂತರ ಬಿಜೆಪಿ ಸರಕಾರ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಅಧಿಸೂಚನೆ ಹೊರಡಿಸಿತು. ಈ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯ ಶಾಫಿ ಸಅದಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಕಳೆದ ಸಾಲಿನ ನವೆಂಬರ್ 18ಕ್ಕೆ ಶಾಫಿ ಸಅದಿ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ್ದರು. ನೂತನ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅವರ ನಾಮ ನಿರ್ದೇಶನವನ್ನು ರದ್ದುಗೊಳಿಸಿತ್ತು. ಆದರೆ, ಒಂದೇ ದಿನದಲ್ಲಿ ಆ ಆದೇಶವನ್ನು ಹಿಂಪಡೆಯಲಾಗಿತ್ತು.
ಶಾಫಿ ಸಲ್ಲಿಸಿದ್ದ ರಾಜೀನಾಮೆಯನ್ನು ಸರ್ಕಾರವು ಜು.5ರಂದು ಅಂಗೀಕರಿಸಿರುವುದಾಗಿ ತಿಳಿದುಬಂದಿದೆ.ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಶಾಫಿ ಸಅದಿ ಸಲ್ಲಿಸಿದ್ದ ರಾಜೀನಾಮೆಯನ್ನು ಜು.5ರಿಂದ ಕೂಡಲೇ ಜಾರಿಗೆ ಬರುವಂತೆ ಸರ್ಕಾರ ಅಂಗೀಕರಿಸಲಾಗಿದೆ ಎಂದು ತಿಳಿದು ಬಂದಿದೆ.