ಬೆಂಗಳೂರು: ಶಿರಾಡಿ ಘಾಟ್, ಚಾರ್ಮಾಡಿ ಘಾಟ್ ಮತ್ತು ಆಗುಂಬೆ ಘಾಟ್ ರಸ್ತೆಗಳ ಸ್ಥಿತಿಗತಿಗಳ ಬಗ್ಗೆ ಹಾಗೂ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಚರ್ಚಿಸಲು ಬೆಂಗಳೂರಿನಲ್ಲಿ ಇಂದು ಸಭೆ ನಡೆಯಿತು.
ವಿಕಾಸ ಸೌಧದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ಹಾಸನ ಜಿಲ್ಲಾಧಿಕಾರಿ ಗಿರೀಶ್ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆಯ ಬಳಿಕ ಮಾತನಾಡಿದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್, ಶಿರಾಡಿ ಘಾಟ್ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬಗೆಹರಿಸಿದ್ದು ಸಂಚಾರಕ್ಕೆ ಬಂದ್ ಆಗುವ ಅವಕಾಶ ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಶಿರಾಡಿ ಘಾಟ್ ಕೆಲಸ ಪೂರ್ಣವಾದರೆ ಶಾಶ್ವತ ಪರಿಹಾರ ಸಿಗಲಿದ್ದು, ಮಾರ್ಚ್ 2023ರ ಒಳಗಾಗಿ ಕೆಲಸ ಮುಗಿಯುತ್ತದೆ ಎಂದು ಹೇಳಿರುವ ಸಚಿವ ಪಾಟೀಲ್, ಗುತ್ತಿಗೆದಾರರ ದಿವಾಳಿ ಆಗಿದ್ದರಿಂದಲೂ ಅಲ್ಲಿ ಕೆಲಸ ವಿಳಂಬವಾಗಿದೆ, ಅವಶ್ಯಕತೆ ಬಿದ್ದರೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನೂ ಕೂಡ ಭೇಟಿ ಮಾಡಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ತಿಳಿಸಿದ್ದಾರೆ.