ಬೆಳ್ತಂಗಡಿ : ಮಳೆಯಿಂದ ಹಾನಿಯಾದ ಬೆಳ್ತಂಗಡಿಯ ಎರಡು ಪ್ರದೇಶಗಳಿಗೆ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆ.2 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಳ್ತಂಗಡಿ ತಾಲೂಕಿನ ಮದಡ್ಕ – ಪಡಂಗಡಿ ಸಂಪರ್ಕ ಕಿಂಡಿ ಅಣೆಕಟ್ಟು ಕುಸಿತವಾದ ಪ್ರದೇಶವನ್ನು ಪರಿಶೀಲನೆ ನಡೆಸಿ ಊರವರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಲಾಯಿಲ ಗ್ರಾಮದ ಗುರಿಂಗಾನ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಊರಿನವರಿಂದ ತಿಳಿದುಕೊಂಡರು. ಇಲಾಖೆಯ ಅಧಿಕಾರಿಗಳಿಂದ ಎಲ್ಲಾ ಮಾಹಿತಿಗಳನ್ನು ಪಡೆದುಕೊಂಡರು.

ಮಳೆ ಬರುತ್ತಿರುವ ಕಾರಣ ಈಗ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಮಳೆ ಕಡಿಮೆಯಾದ ಬಳಿಕ ಇಲಾಖೆಯಿಂದ ವರದಿ ತರಿಸಿಕೊಂಡು ಕಿಂಡಿ ಅಣೆಕಟ್ಟಿನ ಕೆಲಸ ಕಾರ್ಯಗಳನ್ನು ನಡೆಸಲಾಗುವುದು ಹಾಗೂ ಹಾನಿಯಾಗಿರುವ ಮನೆಗಳಿಗೆ ಪರಿಹಾರವನ್ನು ನೀಡುವ ಕ್ರಮ ಗೊಳ್ಳಲಾಗುವುದು ಎಂದು ಮಾಧ್ಯಮಗಳಿಗೆ ಸಚಿವರು ಮಾಹಿತಿ ನೀಡಿದರು.

ಆರೋಗ್ಯ ಸಚಿವ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜೊತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಪುತ್ತೂರು ಎ.ಸಿ ಜುಬಿನ್ ಮೋಹಪಾತ್ರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು ಎಇಇ ನಿತಿನ್, ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾಲೂಕು ಪಂಚಾಯತ್ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ , ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್.ಕೆ , ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಮತ್ತಿತರ ಅಧಿಕಾರಿಗಳು ಭಾಗಿಯಾಗಿದ್ದರು.
