ಮಡಿಕೇರಿ: ಸಚಿವ ಸಂಪುಟ ರಚನೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಸರ್ಕಸ್ ನಲ್ಲಿ ತೊಡಗಿದ್ದರೆ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಮಾಕುಟ್ಟ ಚೆಕ್ ಪೋಸ್ಟ್ ನಲ್ಲಿ ಬೀಡು ಬಿಟ್ಟಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಬಿಜೆಪಿ ಶಾಸಕ ಬೋಪಯ್ಯ ವಿರಾಜಪೇಟೆ ತಾಲೂಕಿನ ಮಾಕುಟ್ಟ ಚೆಕ್ ಪೋಸ್ಟ್ ನಲ್ಲಿ ಕುರ್ಚಿ ಹಾಕಿ ಕುಳಿತು ಬಿಗಿ ಕ್ರಮಗಳ ಕುರಿತು ಖುದ್ದು ಪರಿಶೀಲನೆ ನಡೆಸಿದ್ದಾರೆ.
ಚೆಕ್ ಪೋಸ್ಟ್ ನಲ್ಲಿ ಕೇರಳದಿಂದ ಬರುವ ಎಲ್ಲಾ ಪ್ರಯಾಣಿಕರನ್ನು ಕಟ್ಟುನಿಟ್ಟಿನ ತಪಾಸಣೆಗೆ ಒಳಪಡಿಸುವಂತೆ ಅಧಿಕಾರಿಗಳಿಗೆ ಬೋಪಯ್ಯ ಸೂಚನೆ ನೀಡಿದ್ದಾರೆ. ಅಲ್ಲದೇ ಹಣ ಪಡೆದು ಗಡಿ ದಾಟಲು ಅವಕಾಶ ಕೊಟ್ಟಲ್ಲಿ ಕಠಿಣ ಕ್ರಮ ಜರುಗಿಸುವುದಾಗಿಯೂ ಅಧಿಕಾರಿಗಳಿಗೆ ಬೋಪಯ್ಯ ಎಚ್ಚರಿಕೆ ಕೊಟ್ಟಿದ್ದಾರೆ.
ಎಲ್ಲಾ ಪ್ರಯಾಣಿಕರ ಪ್ರತಿಯೊಂದು ದಾಖಲೆಗಳನ್ನು ಕೂಡಾ ಪರಿಶೀಲನೆಗೆ ಒಳಪಡಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ಬೋಪಯ್ಯ ಎಚ್ಚರಿಕೆ ಕೊಟ್ಟಿದ್ದಾರೆ. ಕೇರಳದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಕಾರಣ ಕೇರಳ ಗಡಿ ಹಂಚಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಕೂಡಾ ಕಟ್ಟೆಚ್ಚರ ವಹಿಸಲಾಗಿದೆ.
ಮಾಕುಟ್ಟ ಚೆಕ್ ಪೋಸ್ಟ್ ಮೂಲಕ ಹಾದು ಹೋಗುವ ರಸ್ತೆ ಕೇರಳದ ತಲಶ್ಯೇರಿಯನ್ನು ಸಂಪರ್ಕಿಸುತ್ತದೆ.