ಬೆಳ್ತಂಗಡಿ : ಗುಡ್ಡಕ್ಕೆಂದು ತೆರಳಿದ ವೃದ್ಧ 6 ದಿನಗಳ ಬಳಿಕ ಪವಾಡ ದೃಶ್ಯ ರೀತಿಯಲ್ಲಿ ಸುರಕ್ಷಿತವಾಗಿ ಮನೆಗೆ ವಾಪಾಸ್ ಬಂದ ಘಟನೆ ಶಿಬಾಜೆ ಗ್ರಾಮದ ಐಂಗುಡದಲ್ಲಿ ನಡೆದಿದೆ.

ಘಟನೆಯ ವಿವರ : ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಐಂಗುಡ ನಿವಾಸಿ ವಾಸು ರಾಣ್ಯ (82) ಎಂಬುವವರು ಮೇ 21ರ ಬೆಳಗ್ಗೆ ಕೈಯಲ್ಲೊಂದು ಕತ್ತಿ ಹಿಡಿದು, ಮನೆ ಸಮೀಪವಿರುವ ಗುಡ್ಡಕ್ಕೆ ತೆರಳಿದ್ದರು. ಕಟ್ಟಿಗೆ ತರಲು ಹೋಗಿರಬಹುದು ಎಂದು ಮನೆಯವರು ಸುಮ್ಮನಿದ್ದರು. ಮಧ್ಯಾಹ್ನದವರೆಗೂ ವಾಸು ರಾಣ್ಯ ಮನೆಗೆ ಬರದೇ ಇದ್ದಾಗ, ಸ್ಥಳೀಯರ ಜೊತೆ ಹುಡುಕಾಟ ನಡೆಸಿದರು. ಸುಮಾರು ಐದು ದಿನಗಳ ಕಾಲ ಸುತ್ತಮುತ್ತ ಹುಡುಕಿದರೂ ವಾಸು ರಾಣ್ಯ ಪತ್ತೆಯಾಗಿರಲಿಲ್ಲ. ಭಾನುವಾರ ಬೆಳಗ್ಗೆ ಮನೆಯವರು ಆಡು ಮೇಯಿಸಲೆಂದು ಮನೆ ಸಮೀಪವಿರುವ ಗುಡ್ಡೆಗೆ ತೆರಳಿದಾಗ ಕೂ…ಕೂ…ಎಂಬ ಶಬ್ದ ಕೇಳಿ ಬಂತು. ಸದ್ದಿನ ಜಾಡು ಹಿಡಿದು ಸ್ಥಳೀಯರು ಮತ್ತು ಶ್ರೀ ಧರ್ಮಸ್ಥಳದ ಶೌರ್ಯ ವಿಪತ್ತು ತಂಡದವರು ಹುಡುಕಾಟ ನಡೆಸಿದಾಗ ಮನೆಯ ಮೇಲಿನ ಭಾಗದ ಭಂಡಿಹೊಳೆ ಕಾಡಿನ ಸುಮಾರು 2.5 ಕಿ. ಮೀ. ದೂರದಲ್ಲಿ ವಾಸು ರಾಣ್ಯ ಪತ್ತೆಯಾಗಿದ್ದಾರೆ. ಬಳಿಕ ಅವರನ್ನು ಕೊಕ್ಕಡ ಸಮುದಾಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಯಿತು. ವಾಸು ರಾಣ್ಯ ಆರೋಗ್ಯವಾಗಿದ್ದು, ತನ್ನನ್ನು ಯಾರೋ ಬಾ ಬಾ ಎಂದು ಕರೆದಂತಾಯಿತು ಹಾಗಾಗಿ ಧ್ವನಿಯ ಹಿಂದೆ ನಾನು ಹೋದೆ. ಆಹಾರವನ್ನೇನೂ ತಾನು ತೆಗೆದುಕೊಳ್ಳದೆ ಕೇವಲ ನೀರು ಮಾತ್ರ ಕುಡಿಯುತ್ತಿದೆ ಎಂದು ಕನವರಿಕೆಯಂತೆ ಹೇಳುತ್ತಿದ್ದಾರೆ.

ಮಲಗಿದ್ದ ಸ್ಥಳ
ವಾಸು ರಾಣ್ಯ ನಾಪತ್ತೆಯಾದ ದಿನ ಈ ಪರಿಸರದಲ್ಲಿ ವಿಪರೀತ ಗುಡುಗು ಮಿಂಚು ಮಳೆ ಬಂದಿದ್ದರೂ ಆ ಸಮಯದಲ್ಲಿ ಒಬ್ಬಂಟಿಯಾಗಿ ಕಾಡಲ್ಲೇ ಮರದ ಅಡಿಯಲ್ಲಿ ಎಲೆಗಳನ್ನು ಮರಕ್ಕೆ ಅಡ್ಡ ಹಾಕಿ ಎಲೆಗಳನ್ನು ನೆಲಕ್ಕೆ ಹಾಕಿ ಐದು ದಿನ ರಾತ್ರಿ ಸಮಯದಲ್ಲಿ ಮಲಗಿದ್ದರು ಎನ್ನಲಾಗಿದೆ.

ವಾಸು ರಾಣ್ಯ ಅವರನ್ನು ಪತ್ತೆಹಚ್ಚುವ ಕಾರ್ಯಾಚರಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶೌರ್ಯ ವಿಪತ್ತು ತಂಡದ ಅವಿನಾಶ್ ಭಿಡೆ, ಶೀನಪ್ಪ, ಗಂಗಾಧರ ಶಿಶಿಲ, ಕುಶಾಲಪ್ಪ ಶಿಶಿಲ, ಪ್ರವೀಣ್ ಪತ್ತಿಮಾರು, ಮತ್ತು ಸ್ಥಳೀಯರಾದ ಗೋವಿಂದ, ಗಣೇಶ್, ಸುರೇಶ, ಪುನೀತ್, ಶರತ್, ಶಶಿಕಾಂತ್, ವಿಶ್ವನಾಥ್, ಕೃಷ್ಣ ನಾಯ್ಕ್,ಮತ್ತು ವಾಸು ರಾಣ್ಯರ ಪುತ್ರರಾದ ಕಮಲಾಕ್ಷ ಮತ್ತು ಸುರೇಶ್ ಮತ್ತು ರಾಣ್ಯ ಕುಟುಂಬಸ್ಥರು ಸಹಕರಿಸಿದರು.



