ಮಂಗಳೂರು: ರೈತರ ಖಾತೆಗೆ ನೇರವಾಗಿ ಹಣ ಸಂದಾಯವಾಗುವ ಕಿಸಾನ್ ಸಮ್ಮಾನ್ ಯೋಜನೆ, ಫಸಲ್ ಭೀಮಾ ಬೆಳೆ ವಿಮೆ ಯೋಜನೆಯಂತಹ ಮಹತ್ತರವಾದ ಯೋಜನೆಗಳನ್ನು ದೇಶದಲ್ಲಿ ಜಾರಿ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ದೇಶದ ರೈತರ ಪಾಲಿನ ದೇವರಾಗಿದ್ದಾರೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ದೀನ ದಯಾಳು ಸಭಾ ಭವನದಲ್ಲಿ ಸುಳ್ಯ ಮಂಡಲ ಬಿಜೆಪಿ ರೈತ ಮೋರ್ಚಾದ ವತಿಯಿಂದ ನಡೆದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಎಂಟನೇ ವರ್ಷಾಚರಣೆಯ ಸೇವೆ ಸುಶಾಸನ ಬಡವರ ಕಲ್ಯಾಣ ಅಭಿಯನ, ಕೇಂದ್ರ ಸರಕಾರದ ಬೆಳೆ ವಿಮೆ ಯೋಜನೆ ಮತ್ತು ಕಿಸಾನ್ ಸಮ್ಮಾನ್ ಯೋಜನಗಳ ಫಲಾನುಭವಿಗಳ ಸಮಾವೇಶ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ನಳಿನ್ ಕುಮಾರ್ ಕಟೀಲ್ ಮಾತನಾಡಿದರು.
ಕಳೆದ ಎಂಟು ವರ್ಷಗಳಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಿ ವಿಶ್ವದಲ್ಲಿ ಭಾರತಕ್ಕೆ ವಿಶೇಷ ಸ್ಥಾನಮಾನ ತಂದು ಕೊಟ್ಟ ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿನ ಬಡವರು, ರೈತರು ನಿರುದ್ಯೋಗಿಗಳ ಅಭ್ಯುದಯಕ್ಕಾಗಿ ನೂರಾರು ಯೋಜನೆಗಳನ್ನು ಜಾರಿಗೆ ತಂದು ಕಳೆದ ಎಪ್ಪತ್ತು ವರ್ಷದಲ್ಲಿ ಅತೀ ಹೆಚ್ಚು ಯೋಜನೆಗಳನ್ನು ಅನುಷ್ಠಾನ ಮಾಡಿದ ಹೆಗ್ಗಳಿಕೆ ಪಾತ್ರರಾಗಿದ್ದಾರೆ ಎಂದು ಕಟೀಲ್ ಶ್ಲಾಘಿಸಿದರು.
ದೇಶದಲ್ಲಿ ಇಂದು ಕಾಂಗ್ರೆಸ್ ನಿರ್ನಾಮವಾಗುತ್ತಿದ್ದು, ತಮ್ಮ ಅಸ್ತಿತ್ವಕ್ಕೋಸ್ಕರ ಹೆಣಗಾಡುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಯಾವುದೇ ಯೋಜನೆಗಳನ್ನು ಜಾರಿಗೆ ತಂದರೂ ರಾಜಕೀಯ ಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ. ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರಾಗಿರುವ ಕಾಂಗ್ರೆಸ್ ಪಕ್ಷ ತನ್ನ ನೈತಿಕತೆಯನ್ನು ಕಳೆದುಕೊಂಡಿದೆ. ವಿರೋಧ ಪಕ್ಷಗಳ ಅಟೋಟಾಪಗಳನ್ನು ದೇಶದ ಜನ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎನ್ನುವ ಸಾಮಾನ್ಯ ಜ್ಞಾನ ಕೂಡಾ ಅವರಿಗಿಲ್ಲ ಎಂದು ನಳಿನ್ ಕುಮಾರ್ ಹೇಳಿದರು.
ಅತಿಥಿಯಾಗಿ ಭಾಗವಹಿಸಿದ್ದ ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಮಾತನಾಡಿ ಜನಪ್ರತಿನಿಧಿಗಳು ಹಾಗೂ ಪಕ್ಷದ ವಿವಿಧ ಜವಾಬ್ದಾರಿ ವಹಿಸಿಕೊಂಡಿರುವ ಪ್ರಮುಖರು ಅಧಿಕಾರಕ್ಕೆ ದುಂಬಾಲು ಬೀಳದೆ, ತಮಗೆ ಕೊಟ್ಟ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿ ಜನರ ವಿಶ್ವಾಸ ಗಳಿಸಬೇಕು. ಕೇಂದ್ರ ಹಾಗೂ ರಾಜ್ಯ ಬಿಜೆಪಿ ನೇತೃತ್ವದ ಸರಕಾರಗಳು ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದರೂ ಅದು ಅರ್ಹ ಫಲಾನುಭವಿಗಳಿಗೆ ಇನ್ನೂ ತಲುಪುತ್ತಿಲ್ಲ. ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ಯುವ ಕಾರ್ಯ ಮಾಡಬೇಕು ಎಂದು ಹೇಳಿದರು.