ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಭದ್ರಾ ನದಿಗೆ ಬಿದ್ದು ಯುವಕ ಸಾವನ್ನಪ್ಪಿದ ಬೆನ್ನಲ್ಲೇ ಆತನ ಮೃತದೇಹ ಸಿಗುವ ಮೊದಲೇ ಕೆರೆಗೆ ಹಾರಿ ತಾಯಿ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ನಡೆದಿದೆ
ಗುರುವಾರ ಸಂಜೆ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಭದ್ರಾ ನದಿಗೆ ಬಿದ್ದ ಪರಿಣಾಮ ರವಿಕಲಾ ಪುತ್ರ ಶಮಂತ್ (23) ಎಂಬ ಯುವಕ ಸಾವನ್ನಪ್ಪಿದ್ದ. ವಿಚಾರ ತಿಳಿಯುತ್ತಿದ್ದಂತೆ ಶಮಂತ್ ತಾಯಿ ರವಿಕಲಾ (48) ಕೆರೆಗ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಮಂತ್ ಪಿಕಪ್ನಲ್ಲಿ ಕಾಫಿ ತೋಟಕ್ಕೆ ಕಾರ್ಮಿಕರ ಟ್ರಿಪ್ ಹೊಡೆಯುತ್ತಿದ್ದ. ಗುರುವಾರ ಸಂಜೆ ಬಾಡಿಗೆ ಇದೆ ಎಂದು ಕಳಸಕ್ಕೆ ಬಂದು ವಾಪಸ್ ಗ್ರಾಮಕ್ಕೆ ಹೋಗುವಾಗ ಪಿಕಪ್ ಅಪಘಾತಕ್ಕೆ ಈಡಾಗಿತ್ತು. ನಿರಂತರ ಮಳೆ ಸುರಿಯುತ್ತಿದ್ದರಿಂದ ಭದ್ರಾ ನದಿಯಿಂದ ಜೀಪ್ ಮೇಲೆತ್ತುವ ಕಾರ್ಯಾಚರಣೆಗೂ ತೊಂದರೆಯಾಗಿತ್ತು. ಭದ್ರಾ ನದಿ ಬಳಿ ಬಂದಿದ್ದ ಶಮಂತ್ ತಾಯಿ ಮಗನ ನೆನೆದು ಕಣ್ಣೀರಿಟ್ಟಿದ್ದರು. ಆದರೆ, ಮಗನ ಮೃತದೇಹ ಸಿಗುವ ಮುನ್ನವೇ ರಾತ್ರಿ ವೇಳೆ ಮನೆಯ ಹಿಂದಿನ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


