ಮಂಗಳೂರು: ಆಪರೇಷನ್ ಸಿಂಧೂರದ ಹಿನ್ನೆಲೆಯಲ್ಲಿ ಭಯೋತ್ಪಾದನೆ ವಿರುದ್ಧ ಜಾಗತಿಕ ಬೆಂಬಲ ಗಳಿಸುವ ಸಲುವಾಗಿ ಕೇಂದ್ರ ಸರ್ಕಾರ ನೇಮಿಸಿದ್ದ ಸರ್ವ ಪಕ್ಷ ನಿಯೋಗದಲ್ಲಿ ವಿದೇಶಕ್ಕೆ ತೆರಳಿದ್ದ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಮಂಗಳೂರಿಗೆ ವಾಪಸಾಗಿದ್ದಾರೆ.
ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ರಿಜೇಶ್ ಚೌಟ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಾಜಿ ಎಂಎಲ್ಸಿಗಳಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮತ್ತು ಮೋನಪ್ಪ ಭಂಡಾರಿ ಉಪಸ್ಥಿತರಿದ್ದರು.
ಡಿಎಂಕೆ ಸಂಸದೆ ಕನ್ನಿಮೋಳಿ ನೇತೃತ್ವದಲ್ಲಿ ಬ್ರಿಜೇಶ್ ಚೌಟ ಅವರನ್ನೊಳಗೊಂಡ ಎಂಟು ಜನ ಭಾರತದ ಸಂಸದರ ತಂಡ ರಷ್ಯಾ ಮತ್ತು ಯೂರೋಪ್ ದೇಶಗಳಲ್ಲಿ ಪ್ರವಾಸ ಕೈಗೊಂಡಿತ್ತು.
ಸರ್ವ ಪಕ್ಷ ನಿಯೋಗಗಳ ಸದಸ್ಯರಾಗಿ ಕರ್ನಾಟಕದ ಸಂಸದರ ಪೈಕಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರನ್ನು ಆಯ್ಕೆ ಮಾಡಲಾಗಿತ್ತು.