ನವದೆಹಲಿ: ಉಡುಪಿ ಜಿಲ್ಲೆಯಲ್ಲಿ ಸಿಎನ್ ಜಿ ಗ್ಯಾಸ್ ಕೊರತೆಯಿಂದ ರಿಕ್ಷಾ ಚಾಲಕರು ಮತ್ತು ಇತರ ಸಿಎನ್ ಜಿ ಬಳಕೆಯ ವಾಹನ ಮಾಲೀಕರು ಸಮಸ್ಯೆ ಎದುರಿಸುತ್ತಿರುವುದನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಸಿಎನ್ ಜಿ ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರಕಾರ ಮಧ್ಯ ಪ್ರವೇಶ ಮಾಡಬೇಕೆಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಕೋಟ ಶ್ರೀನಿವಾಸ ಪೂಜಾರಿ ಮನವಿ ಸಲ್ಲಿಸಿದ್ದಾರೆ.
ಸದ್ಯ ಉಡುಪಿ ಜಿಲ್ಲೆಯಲ್ಲಿ 21,000 ಕೆಜಿ ಸಿಎನ್ ಜಿ ಬೇಡಿಕೆ ಇದ್ದು ಈಗ 14,000 ಕೆಜಿ ಪೂರೈಕೆಯಾಗುತ್ತಿದೆ. ಅಲ್ಲದೇ 8 ಸಿಎನ್ ಜಿ ಬಂಕ್ ಗಳು ಕಾರ್ಯನಿರ್ವಹಿಸುತ್ತಿವೆ.
ಹೀಗಾಗಿ ಜಿಲ್ಲೆಗೆ ಹೆಚ್ಚುವರಿ ಬಂಕ್ಗಳನ್ನು ಮಂಜೂರು ಮಾಡಬೇಕೆಂದು ಮತ್ತು ಸಿಎನ್ ಜಿ ಬೇಡಿಕೆಯನ್ನು ಪೂರ್ಣ ಪ್ರಮಾಣದಲ್ಲಿ ಪೂರೈಸಲು ಸಂಬಂಧಿತ ಕಂಪನಿಗಳಿಗೆ ಆದೇಶ ನೀಡಬೇಕೆಂದು ಕೇಂದ್ರ ಸಚಿವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.
ಸಂಸದರ ಮನವಿಗೆ ಸ್ಪಂದಿಸಿರುವ ಕೇಂದ್ರ ಸಚಿವರು ಕೂಡಲೇ ಕ್ರಮ ಜರುಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಈ ಸಂದರ್ಭದಲ್ಲಿ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕೂಡಾ ಉಪಸ್ಥಿತರಿದ್ದರು.