ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಎದುರು ಕುಳಿತು ಮೌನ ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾಗಿದ್ದ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮದಲ್ಲಿ ಗಂಗಾ ಕಲ್ಯಾಣ ಕೊಳವೆ ಬಾವಿ ಕೊರೆಸುವ ಯೋಜನೆಯಡಿ ಭ್ರಷ್ಟಾಚಾರ ಅಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಆರೋಪ ಮಾಡಿದ್ದರು.
ತಮ್ಮ ವಿರುದ್ಧ ಸದನದಲ್ಲಿ ಮುಖ್ಯಮಂತ್ರಿಗಳಿಂದಲೇ ಭ್ರಷ್ಟಾಚಾರದ ಆರೋಪ ಹಿನ್ನೆಲೆಯಲ್ಲಿ ಆರೋಪದ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿ ಕೋಟ ಶ್ರೀನಿವಾಸ ಪೂಜಾರಿ ಮೌನ ಪ್ರತಿಭಟನೆ ನಡೆಸಿದರು.
ಕಳೆದ ವಾರ ಸಿಎಂಗೆ ಪತ್ರ ಬರೆದಿದ್ದ ಕೋಟ ಶ್ರೀನಿವಾಸ ಪೂಜಾರಿ, ಸಿಬಿಐ ತನಿಖೆಗೆ ವಹಿಸದಿದ್ದರೆ ಧರಣಿ ಕುಳಿತುಕೊಳ್ಳುವುದಾಗಿ ಹೇಳಿದ್ದರು. ಆದರೆ ರಾಜ್ಯ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ ಇಂದು ಪ್ರತಿಭಟನೆ ನಡೆಸಿದರು.
ಸಂಸದ ಪೂಜಾರಿ ಅವರಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಸುರೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಪ್ರತಾಪ ಸಿಂಹ ನಾಯಕ್, ಶಾಂತರಾಮ್ ಸಿದ್ದಿ ಭಿತ್ತಿ ಪತ್ರದೊಂದಿಗೆ ಸಾಥ್ ನೀಡಿದ್ದರು.