ಬೆಂಗಳೂರು: ಮುತ್ತಪ್ಪ ರೈ ಸಾವಿನ ನಂತರ ಅವರ ಕುಟುಂಬದಲ್ಲಿ ಆಸ್ತಿ ವಿವಾದ ಶುರುವಾಗಿದ್ದು, ರೈ ಎರಡನೇ ಪತ್ನಿ ಅನುರಾಧ ಆಸ್ತಿಯಲ್ಲಿ ತನ್ನ ಪಾಲು ಕೇಳಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಮುತ್ತಪ್ಪ ರೈ ಅವರು ಸಾಯುವ ಮುನ್ನವೇ ತನ್ನ ಆಸ್ತಿಯ ಬಗ್ಗೆ ವಿಲ್ ಬರೆದು ಇಟ್ಟಿದ್ದರು. ಇದರಲ್ಲಿ ಅವರ ಆಸ್ತಿ ಯಾರಿಗೇ ಸೇರಬೇಕು ಮತ್ತು ಎಷ್ಟು ಸೇರಬೇಕು ಎಂದು ತಿಳಿಸಿದ್ದರು. ಹೀಗಿದ್ದರೂ ಅವರ ಸಾವಿನ ಬಳಿಕ ಅವರ ಎರಡನೇ ಪತ್ನಿ ಅನುರಾಧ ಪಾಲು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಮುತ್ತಪ್ಪ ರೈ ಮಕ್ಕಳಾದ ರಾಕಿ ರೈ, ರಿಕ್ಕಿ ರೈ ಸೇರಿ 17 ಮಂದಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಸಿಟಿ ಸಿವಿಲ್ ನ್ಯಾಯಾಲಯ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಆಗಸ್ಟ್ 4ಕ್ಕೆ ಮುಂದೂಡಿದೆ.
ಅನುರಾಧರ ಪಾಲು ನೀಡಲಾಗಿದೆ
ಎರಡನೇ ಪತ್ನಿ ಅನುರಾಧಾಗೆ ಆಸ್ತಿ ಹಂಚಿಕೆ ಮಾಡಿರುವುದಾಗಿ ಮುತ್ತಪ್ಪ ರೈ ವಿಲ್ನಲ್ಲಿ ತಿಳಿಸಿದ್ದರು. ಚಿನ್ನಾಭರಣ, ಕಾರು, ಕೋಟ್ಯಂತರ ರೂಪಾಯಿ ಹಣದ ಜೊತೆ ಹೆಚ್ ಡಿ ಕೋಟೆ ಆಸ್ತಿ, ಜೊತೆಗೆ ಸಹಕಾರ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡವನ್ನು ನಿರ್ಮಿಸಿ ಕೊಡಲಾಗಿದೆ. ಅನುರಾಧಾ ಜೊತೆಗಿದ್ದ ಸಂದರ್ಭದಲ್ಲಿ ಅವರಿಗೆ ಸೇರಬೇಕಾದ ಆಸ್ತಿಯನ್ನು ನೀಡಲಾಗಿದೆ ಎಂದು ವಿಲ್ನಲ್ಲಿ ಉಲ್ಲೇಖವಾಗಿದೆ.
ಮುತ್ತಪ್ಪ ರೈ ಬಿಟ್ಟುಹೋದ ಆಸ್ತಿ ಎಷ್ಟು ?
ವಿಲ್ ಪ್ರಕಾರ ಸುಮಾರು 2 ಸಾವಿರ ಕೋಟಿಗೂ ಅಧಿಕ ಆಸ್ತಿ ರೈ ಹೆಸರಿನಲ್ಲಿದೆ. ದೇವನಹಳ್ಳಿ, ಯಲಹಂಕ, ಬಿಡದಿಯಲ್ಲಿ 150ಕ್ಕೂ ಅಧಿಕ ಎಕರೆ ಜಾಗ, ಮೈಸೂರು, ಮಂಗಳೂರು, ಬಂಟ್ವಾಳ, ಪುತ್ತೂರಿನಲ್ಲಿ ಸೇರಿ ಸುಮಾರು 600 ಎಕರೆ ಜಮೀನು ಮುತ್ತಪ್ಪ ರೈ ಹೆಸರಿನಲ್ಲಿದೆ. ಸಕಲೇಶಪುರದಲ್ಲಿ 200 ಎಕರೆ ಜಮೀನಿದೆ.
ಮಕ್ಕಳಿಗೆ ಆಸ್ತಿ ಹಂಚಿಕೆ
ಮುತ್ತಪ್ಪ ರೈ ಸಂಪಾದಿಸಿದ್ದ 600ಕ್ಕೂ ಅಧಿಕ ಎಕರೆ ಜಮೀನನ್ನು ತನ್ನಿಬ್ಬರು ಮಕ್ಕಳಾದ ರಿಕ್ಕಿ ಹಾಗೂ ರಾಖಿ ರೈಗೆ ಗಿಫ್ಟ್ ಡೀಡ್ ಮಾಡಿದ್ದಾರೆ. ಆಸ್ತಿಗಳ ಪೈಕಿ ಮೈಸೂರು, ಪುತ್ತೂರು, ಬಂಟ್ವಾಳ, ಮಂಗಳೂರು ಜಾಗವನ್ನು ರಾಖಿ ರೈಗೆ ನೀಡಿದ್ದರೆ, ಸಕಲೇಶಪುರ, ಬಿಡದಿ, ಯಲಹಂಕ ಹಾಗೂ ದೇವನಹಳ್ಳಿ ಜಾಗವನ್ನು ಚಿಕ್ಕ ಮಗ ರಿಕ್ಕಿ ರೈಗೆ ಹಂಚಿಕೆ ಮಾಡಿದ್ದಾರೆ. ಬಿಡದಿ ಹಾಗೂ ಸದಾಶಿವನಗರದ ಎರಡೂ ಮನೆಗಳ ಜವಾಬ್ದಾರಿಯನ್ನು ಚಿಕ್ಕ ಮಗ ರಿಕ್ಕಿ ರೈಗೆ ನೀಡಿದ್ದು ಟ್ರೇಡಿಂಗ್ ವ್ಯವಹಾರ ಕಂಪನಿಯನ್ನು ದೊಡ್ಡ ಮಗ ರಾಖಿ ನೋಡಿಕೊಳ್ಳುವಂತೆ ಸೂಚಿಸಿದ್ದರು.