ಬೆಂಗಳೂರು: ಭಯೋತ್ಪಾದನೆ, ಕ್ರಿಮಿನಲ್ ಚಟುವಟಿಕೆ ಮತ್ತು ಗೂಂಡಾ ರಾಜಕೀಯದಂಥ ದೇಶ ವಿರೋಧಿ ಚಟುವಟಿಕೆಯನ್ನು ನಮ್ಮ ಪಕ್ಷ ಸಹಿಸುವುದಿಲ್ಲ ಹಾಗೂ ಒಪ್ಪಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾತನಾಡಿದ ಕಟೀಲ್, ಮೊನ್ನೆ ಯಾವುದೋ ಒಂದು ಕಾರ್ಯಕ್ರಮದ ವೇದಿಕೆಯಲ್ಲಿ ನಮ್ಮವರು ಪಾಲ್ಗೊಂಡಿದ್ದನ್ನು ಗಮನಿಸಿದ್ದೇನೆ. ಆ ಕುರಿತಂತೆ ವಿವರಣೆ ಕೇಳಿದ್ದೇನೆ. ಯಾವುದೇ ಕಾರಣಕ್ಕೆ ಕ್ರಿಮಿನಲ್ ಹಿನ್ನೆಲೆ ಉಳ್ಳವರನ್ನು ಪಕ್ಷಕ್ಕೆ ಸೇರಿಸುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದೇನೆ. ಇಲ್ಲಿಗೆ ಈ ವಿಷಯಕ್ಕೆ ಮುಕ್ತಾಯ ಹಾಕುತ್ತೇನೆ ಎಂದು ಹೇಳಿದ್ದಾರೆ.
ಇದೇ ವೇಳೆ ಡಿ.ಕೆ. ಶಿವಕುಮಾರ್ ಯಾರ ಶಿಷ್ಯ? ಎಲ್ಲಿಂದ ರಾಜಕಾರಣಕ್ಕೆ ಬಂದರು ಎಂದು ನಾನೇನೂ ಬಹಿರಂಗ ಪಡಿಸಬೇಕಿಲ್ಲ. ಡಿ.ಕೆ.ಶಿವಕುಮಾರ್ ಇತಿಹಾಸ, ವ್ಯವಸ್ಥೆಗಳು, ರಕ್ತಸಿಕ್ತ ಕಾಂಗ್ರೆಸ್ನ ಚಟುವಟಿಕೆಗಳು ನನಗಿಂತ ಹೆಚ್ಚಾಗಿ ಬೆಂಗಳೂರಿನ ಜನರಿಗೆ ತಿಳಿದಿವೆ ಎಂದು ಉತ್ತರಿಸಿದರು.
ರಾಜಕೀಯ ವ್ಯವಸ್ಥೆಯಲ್ಲಿ ಸಹಜವಾಗಿ ಕೆಲವೊಂದು ಅಚಾತುರ್ಯಗಳಾಗುತ್ತವೆ. ಇಂಥ ಘಟನೆಗಳು, ಕ್ರಿಮಿನಲ್ ಕೇಸುಗಳ ಕಾರಣವನ್ನೂ ಗಮನಿಸುತ್ತೇವೆ. ಎಲ್ಲ ಪ್ರಕರಣಗಳನ್ನೂ ಒಂದೇ ರೀತಿ ನೋಡಲು ಸಾಧ್ಯವಿಲ್ಲ. ನಮ್ಮ ಸಂಘಟನೆಯ ಎಲ್ಲರ ಮೇಲೂ ಪ್ರಕರಣಗಳನ್ನು ದಾಖಲಿಸಿದ್ದಾರೆ. ಹಿಂದುತ್ವದ ಪರವಾದ ಹೋರಾಟ ಮಾಡಿದ್ದರ ವಿರುದ್ಧ ಕೇಸುಗಳೂ ಇವೆ. ಕಾಂಗ್ರೆಸ್ ಆಡಳಿತದಲ್ಲಿ ಇದ್ದಾಗ ಎಲ್ಲರ ಮೇಲೆ ಪ್ರಕರಣ ದಾಖಲಿಸಿ ರೌಡಿ ಲಿಸ್ಟ್ ಗೆ ಸೇರಿಸಿದೆ ಎಂದು ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.