ಬೆಂಗಳೂರು: ಶ್ರೀ ನಾರಾಯಣ ಗುರುಗಳ ಆದರ್ಶ, ವಿಚಾರಧಾರೆಗಳು ಇಂದಿಗೂ ಪ್ರಸ್ತುತ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣ ಗೌಡ ಅವರು ಸ್ಮರಿಸಿದರು.
ಬೆಂಗಳೂರಿನಲ್ಲಿ ಇಂದು ಬಿಲ್ಲವ ಅಸೋಸಿಯೇಷನ್ ಬೆಂಗಳೂರು ವತಿಯಿಂದ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜಯಂತೋತ್ಸವದಲ್ಲಿ ಪಾಲ್ಗೊಂಡಿದ್ದ ಸಚಿವ ಡಾ. ನಾರಾಯಣಗೌಡ ಅವರು, ಬಿಲ್ಲವ ಅಸೋಸಿಯೇಷನ್ ಗೂ ನನಗೂ ಅವಿನಾಭಾವ ಸಂಬಂಧವಿದೆ. 30-35 ವರ್ಷಗಳಿಂದ ಬಿಲ್ಲವ ಅಸೋಸಿಯೇಷನ್ ಜೊತೆ ನನ್ನ ಸಂಬಂಧ ಇದೆ ಎಂದು ಬಿಲ್ಲವರ ಜೊತೆಗಿನ ಸಂಬಂಧವನ್ನು ಮೆಲುಕು ಹಾಕಿದರು.
ನಾರಾಯಣ ಗುರುಗಳು ಒಂದು ಜಾತಿ, ಒಂದು ಧರ್ಮಕ್ಕೆ ಸೀಮಿತರಲ್ಲ. ಬಡವರು ಶೋಷಿತರ ಪರವಾಗಿ ನಿಂತು ಶ್ರಮಿಸಿದವರು. ಗುರುಗಳ ವಿಚಾರಧಾರೆ ಇಂದಿಗೂ ಪ್ರಸ್ತುತವಾಗಿವೆ ಎಂದು ಸಚಿವ ನಾರಾಯಣ ಗೌಡ ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಆರ್ಯ ಈಡಿಗರ ಸಂಘದ ಅಧ್ಯಕ್ಷ ತಿಮ್ಮೇಗೌಡ, ಬಿಲ್ಲವ ಅಸೋಸಿಯೇಷನ್ ಅಧ್ಯಕ್ಷ ವೇದಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.