ಬೆಂಗಳೂರು : ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಯಲಹಂಕ ವಾಯುನೆಲೆಗೆ ಐಎಎಫ್ ವಿಶೇಷ ವಿಮಾನದಲ್ಲಿ ಆಗಮಿಸಿದ್ದಾರೆ. ಸುಮಾರು ಒಂದೂವರೆ ವರ್ಷದ ಬಳಿಕ ರಾಜ್ಯಕ್ಕೆ ಮೋದಿ ಆಗಮಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಯಿ ಅವರು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು. ಈ ವೇಳೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.
ಕೆಂಗೇರಿ ಬಳಿಯ ಕೊಮ್ಮಘಟ್ಟ ಮೈದಾನದಲ್ಲಿ ಬಹಿರಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ಭದ್ರತೆಗಾಗಿ 2000 ಪೊಲೀಸರನ್ನು ನಿಯೋಜಿಸಲಾಗಿದೆ. ಬೆಂಗಳೂರಿನ ಭದ್ರತೆ ಜವಾಬ್ದಾರಿಯನ್ನು ಕಮಿಷನರ್ ಪ್ರತಾಪ್ ರೆಡ್ಡಿಗೆ ವಹಿಸಲಾಗಿದ್ದು, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 8 ಡಿಸಿಪಿಗಳು, 25 ಎಸಿಪಿಗಳು, 123 ಇನ್ಸ್ ಪೆಕ್ಟರ್ ಗಳು, 125 ಸಬ್ ಇನ್ಸ್ ಪೆಕ್ಟರ್ ಗಳು, ಗರುಡ ಪಡೆ, ಕ್ಷಿಪ್ರ ಕಾರ್ಯಪಡೆಯನ್ನು ನಿಯೋಜಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಾಹ್ನ 12:30 ರ ಸುಮಾರಿಗೆ, ಪ್ರಧಾನ ಮಂತ್ರಿ ಅವರು ಭಾರತೀಯ ವಿಜ್ಞಾನ ಸಂಸ್ಥೆ (IISc) ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಅವರು ಸೆಂಟರ್ ಫಾರ್ ಬ್ರೈನ್ ರಿಸರ್ಚ್ (CBR) ಅನ್ನು ಉದ್ಘಾಟಿಸಲಿದ್ದಾರೆ ಮತ್ತು ಬಾಗ್ಚಿ-ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಅಡಿಪಾಯವನ್ನು ಹಾಕಲಿದ್ದಾರೆ.