ಶಿವಮೊಗ್ಗದ ತುಂಗಾ ನದಿ ತೀರದಲ್ಲಿ ಐಸಿಸ್ ಉಗ್ರರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಪ್ರಾಯೋಗಿಕ ಸ್ಫೋಟದ ವೇಳೆ ರಾಷ್ಟ್ರಧ್ವಜ ಸುಟ್ಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಇಬ್ಬರು ಶಂಕಿತರ ವಿರುದ್ಧ ಮಂಗಳವಾರ 3ನೇ ಪೂರಕ ಆರೋಪಪಟ್ಟಿ ಸಲ್ಲಿಸಿದೆ.
ಪ್ರಕರಣದಲ್ಲಿ 10 ಮಂದಿ ಶಂಕಿತರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದ್ದು, ಈ ಪ್ರಕರಣದ ಸಂಚುಕೋರರು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವೀರ್ ಹುಸೇನ್ ಶಾಜೀಬ್ ಎಂದು ತಿಳಿದು ಬಂದಿದೆ.
ಎನ್ಐಎ ನೀಡಿರುವ ಮಾಹಿತಿಯಂತೆ ಇವರಿಬ್ಬರು 2024ರ ಮಾರ್ಚ್ 1ರಂದು ನಡೆದ ಬೆಂಗಳೂರಿನ ಕುಂದಲಹಳ್ಳಿ ಸಮೀಪದ ರಾಮೇಶ್ವರಂ ಕೆಫೆ ಸ್ಫೋಟದ ರೂವಾರಿಗಳು ಎಂದು ತಿಳಿದು ಬಂದಿದೆ. ಇವರು ಬೆಂಗಳೂರಿನ ಸುದ್ದಗುಂಟೆಪಾಳ್ಯದಲ್ಲಿ 2020ರಲ್ಲಿ ಐಸಿಸ್ ಪ್ರೇರಿತ ಅಲ್-ಹಿಂದ್ ಸಂಘಟನೆ ಸಂಬಂಧ ನಡೆದ ಸಭೆಯಲ್ಲಿ ಭಾಗಿಯಾಗಿದ್ದರು. ಜತೆಗೆ ಮುಸ್ಲಿಂ ಸಮುದಾಯದ ಕೆಲವು ಯುವಕರನ್ನು ಪ್ರಚೋದಿಸಿ ಐಸಿಸ್/ಅಲ್ ಹಿಂದ್ ಸಂಘಟನೆಗಳಿಗೆ ಸೇರಿಸುತ್ತಿದ್ದರು ಎನ್ನಲಾಗಿದೆ.