ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ದಶಕಗಳಿಂದ ಕಾಡುತ್ತಿದ್ದ ನಕ್ಸಲ್ವಾದ ಅಂತಿಮ ಹಂತಕ್ಕೆ ತಲುಪಿದ್ದು, ಆರು ಮಂದಿ ನಕ್ಸಲರು ಬುಧವಾರ ಚಿಕ್ಕಮಗಳೂರು ಡಿಸಿ ಕಚೇರಿಯಲ್ಲಿ ಶರಣಾಗಲು ನಿರ್ಧರಿಸಿದ್ದಾರೆ. ಶರಣಾಗತಿಗೂ ಮುನ್ನ ನಕ್ಸಲರು ನಕ್ಸಲ್ ಪುನರ್ ವಸತಿ ಸಮಿತಿಗೆ 8 ಪುಟಗಳ ಪತ್ರವನ್ನು ಜ.3 ರಂದು ಬರೆದಿದ್ದು ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮುಂಡಗಾರು ಲತಾ, ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆಯ ನಕ್ಸಲ್ ನಾಯಕಿ ಸುಂದರಿ, ಕೇರಳದ ಜೀಶ, ತಮಿಳುನಾಡಿನ ವಸಂತ ಕೆ.ಅಲಿಯಾಸ್ ರಮೇಶ ಮತ್ತು ಆಂದ್ರಪ್ರದೇಶದ ಮಾರೆಪ್ಪ ಅರೋಲಿ ಸೇರಿದಂತೆ ಒಟ್ಟು ಆರು ಜನ ನಕ್ಸಲರು ಶರಣಾಗಲಿದ್ದಾರೆ. ಶರಣಾಗುವ ಮುನ್ನ ಆರು ಜನ ನಕ್ಸಲರು ತಮ್ಮ ಸಹಿ ಸಮೇತ 8 ಪುಟಗಳ ಪತ್ರ ನಕ್ಸಲ್ ಪುನರ್ವಸತಿ ಸಮಿತಿಗೆ ಜ.3 ರಂದು ಬರೆದಿರುವ ಪತ್ರ ಲಭ್ಯವಾಗಿದೆ.ನಿರುದ್ಯೋಗಿಗಳಿಗೆ ಉದ್ಯೋಗ, ತಮ್ಮ ಮೇಲಿನ ಸುಳ್ಳು ಕೇಸ್ಗಳನ್ನು ಖುಲಾಸೆಗೊಳಿಸುವುದು ಮತ್ತು ವಿಕ್ರಂಗೌಡ ಎನ್ಕೌಂಟರ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡುವಂತೆ ಒತ್ತಾಯಿಸಿದ್ದಾರೆ.

ನಕ್ಸಲರು ಬರೆದ ಪತ್ರದಲ್ಲಿ ಏನಿದೆ?: ಆರು ಜನರಾದ ನಾವು ಸಂಪೂರ್ಣ ಸಮ್ಮತಿ ಮತ್ತು ಏಕ ಅಭಿಪ್ರಾಯದ ಮೇರೆಗೆ ಈ ಪತ್ರವನ್ನು ತಮಗೂ ಆ ಮೂಲಕ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನ ಸರ್ಕಾರಿಗಳಗೆ ಬರೆಯುತ್ತಿದ್ದೇವೆ. ದೇಶದ ಇಂದಿನ ಸಂದರ್ಭ, ಚಳುವಳಿಗಳು ಪಡೆಯುತ್ತಿರುವ ರೂಪಾಂತರ, ಸಾಮಾಜಿಕ ಅಗತ್ಯ ಎಲವನ್ನು ಗಮನದಲ್ಲಿ ಇಟ್ಟುಕೊಂಡು ಸಶಸ್ತ್ರ ಹೋರಾಟದ ಮಾರ್ಗವನ್ನು ಬದಲಾಯಿಸಿ ಪ್ರಜಾತಾಂತ್ರಿಕ ಮುಖ್ಯವಾಹಿನಿಗೆ ಮರಳುವುದು ಒಳ್ಳೆಯದು ಮತ್ತು ಅದಕ್ಕೆ ಸಾಧ್ಯತೆ ಇದೆ ಎಂದು ಮನವರಿಕೆಯಾಗಿದೆ. ನಾವು ಯಾವುದೇ ಒತ್ತಡವಿಲ್ಲದೆ. ಸ್ವ-ಇಚ್ಛೆಯಿಂದ ಮುಖ್ಯವಾಹಿನಿಗೆ ಬರಲು ಬಯಸುತ್ತಿದ್ದೇವೆ. ಆದರೆ ಈ ಸಂದರ್ಭದಲ್ಲಿ ಕೆಲವು ಖಚಿತ ಸ್ಪಷ್ಠೀಕರಣವನ್ನು ಸರ್ಕಾರ ಮತ್ತು ಸಂಬಂಧಿತ ಸಮಿತಿಯಿಂದ ಬಯಸುತ್ತಿದ್ದೇವೆ ಎಂದು ಪತ್ರದಲ್ಲಿ ಬರೆದಿದ್ದಾರೆ.


