ಚಿಕ್ಕಮಗಳೂರು: ನಕ್ಸಲ್ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ ಇಂದೇ ಮುಖ್ಯವಾಹಿನಿಗೆ ಬರಲಿದ್ದಾರೆ.
ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿಯಾಗಿದ್ದರು.
ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ತಂಡದಿಂದ ಬೇರ್ಪಟ್ಟಿದ್ದ ಕೋಟೆಹೊಂಡ ರವೀಂದ್ರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರನ್ನು ಸಂಪರ್ಕಿಸುವ ಪ್ರಯತ್ನವನ್ನು ಶಾಂತಿಗಾಗಿ ನಾಗರಿಕ ವೇದಿಕೆ ಮತ್ತು ನಕ್ಸಲ್ ಶರಣಾಗತಿ ಸಮಿತಿ ಮಾಡಿದೆ.
ರವೀಂದ್ರ ಭೇಟಿಯಾಗಿ ಮಾತುಕತೆ ನಡೆಸಿದ್ದು, ಫೆ.1 (ಇಂದು) ಬೆಳಿಗ್ಗೆ 11 ಗಂಟೆ ವೇಳೆಗೆ ಚಿಕ್ಕಮಗಳೂರು ಎಸ್ಪಿ ಕಚೇರಿಯಲ್ಲಿ ಶರಣಾಗಲಿದ್ದಾರೆ ಎಂದು ನಕ್ಸಲ್ ಶರಣಾಗತಿ ಸಮಿತಿ ಸದಸ್ಯ ಕೆ.ಪಿ.ಶ್ರೀಪಾಲ್ ಮತ್ತು ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯ ಕೆ.ಎಲ್.ಅಶೋಕ್ ತಿಳಿಸಿದರು.


