ಮಂಗಳೂರು: ಖ್ಯಾತ ಭಾಗವತ ಸತೀಶ್ ಪಟ್ಲ ಅವರ ನೇತೃತ್ವದಲ್ಲಿ ಹೊಸ ಮೇಳ ಆರಂಭವಾಗುತ್ತಿದೆ ಎಂಬ ಸುದ್ದಿ ಬಹಳ ದಿನಗಳಿಂದ ಕೇಳಿ ಬರುತ್ತಲೇ ಇದೆ. ಇದೀಗ ಈ ಎಲ್ಲಾ ಉಹಾಪೋಹಗಳಿಗೆ ತೆರೆ ಬಿದ್ದಿದೆ. ನವೆಂಬರ್ ತಿಂಗಳು 27ರಿಂದ ಪಾವಂಜೆ ಜ್ಞಾನಶಕ್ತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರದರ್ಶನ ಆರಂಭವಾಗಲಿದೆ ಎಂದು ಪಟ್ಲ ಸತೀಶ್ ಶೆಟ್ಟಿ ಅವರೇ ಹೇಳಿದ್ದಾರೆ.
ಇಂದು ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ಪಟ್ಲ ಸತೀಶ್ ಶೆಟ್ಟಿ ಹಾಗೂ ಪಾವಂಜೆ ದೇವಳದ ಆಡಳಿತ ಮೊಕ್ತೇಸರ ಶಶೀಂದ್ರ ಕುಮಾರ್, ನೂತನ ಮೇಳದ ಬಗ್ಗೆ ಮಾಹಿತಿ ನೀಡಿದರು.
ಮೇಳದ ಯಕ್ಷಗಾನ ಪ್ರದರ್ಶನವು ಕಾಲಮಿತಿಯದ್ದಾಗಿದ್ದು, ಸಾಮಾನ್ಯವಾಗಿ ಸಂಜೆ 6 ಗಂಟೆಯಿಂದ 11ರವರೆಗಿನ ಅವಧಿಯಲ್ಲಿ ನಡೆಯಲಿದೆ. ಈ ಎಲ್ಲಾ ಪ್ರದರ್ಶನಗಳನ್ನು ಕೋವಿಡ್-19ರ ಪರಿಸ್ಥಿತಿಯಲ್ಲಿ ಸರಕಾರ ನೀಡುವ ನಿರ್ದೇಶನಗಳಿಗೆ ಒಳಪಟ್ಟು ನಡೆಸಲಾಗುವುದು ಎಂದಿದ್ದಾರೆ.
ಇನ್ನು ಪಾವಂಜೆ ಜ್ಞಾನಶಕ್ತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದರ ಪಟ್ಟಿ ಹೀಗಿದೆ
ಪಾವಂಜೆ ಜ್ಞಾನಶಕ್ತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯಲ್ಲಿ ಪಟ್ಲ ಸತೀಶ್ ಶೆಟ್ಟಿ ಅವರು ಪ್ರಧಾನ ಭಾಗವತರಾಗಿದ್ದು, ಪ್ರಫುಲ್ಲಚಂದ್ರ ನೆಲ್ಯಾಡಿ ಭಾಗವತಿಕೆಯಲ್ಲಿ ಸಾಥ್ ನೀಡಲಿದ್ದಾರೆ. ಹಿಮ್ಮೇಳದಲ್ಲಿ ಪದ್ಮನಾಭ ಉಪಾಧ್ಯಾಯ, ಗುರುಪ್ರಸಾದ್ ಬೊಳ್ಳಿಂಜಡ್ಕ, ಪ್ರಶಾಂತ್ ವಗೆನಾಡು, ಪೂರ್ಣೇಶ್ ಆಚಾರ್ಯ ಇರಲಿದ್ದಾರೆ.
ಹಾಸ್ಯ ಪಾತ್ರಧಾರಿಗಳು: ಉಜಿರೆ ನಾರಾಯಣ, ಸಂದೇಶ್ ಮಂದಾರ
ಸ್ತ್ರೀ ಪಾತ್ರ: ಅಕ್ಷಯ್ ಕುಮಾರ್, ರಾಜೇಶ್ ನಿಟ್ಟೆ, ಯೋಗೀಶ್ ಕಡಬ, ವಿಶ್ವಾಸ್ ಕಾವೂರು
ಪ್ರಧಾನ ಪಾತ್ರ: ರಾಧಾಕೃಷ್ಣ ನಾವಡ, ದಿವಾಣ ಶಿವಶಂಕರ ಭಟ್, ಸಂತೋಷ್ ಮಾನ್ಯ, ರಾಕೇಶ್ ರೈ, ಸತೀಶ್ ನೈನಾಡು, ಮಾಧವ ಕೊಳ್ತಮಜಲು, ಮೋಹನ್ ಬೆಳ್ಳಿಪ್ಪಾಡಿ, ಮನೀಷ್ ಪಾಟಾಳಿ, ಲೋಕೇಶ ಮುಚ್ಚೂರು, ಹರಿರಾಜ್ ಕಿನ್ನಿಗೋಳಿ, ರೋಹಿತ್, ದಿವಾಕರ, ಲಕ್ಷಣ, ಮಧುರಾಜ್, ಭುವನ್ ಮತ್ತಿತರು ಇರಲಿದ್ದಾರೆ.