ಲಖನೌ: ಉತ್ತರ ಪ್ರದೇಶದಲ್ಲಿ ಹೂಡಿಕೆಸ್ನೇಹಿ ವಾತಾವರಣ ನಿರ್ಮಿಸಿರುವುದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಗ್ಗೆ ಉತ್ತರ ಪ್ರದೇಶ ಪ್ರವಾಸದಲ್ಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಇಂದು ಅವರು, ಗಂಗಾ ಎಕ್ಸ್ಪ್ರೆಸ್ವೇ ಭದ್ರತಾ ಸಾಲ ಮಂಜೂರಾತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು .
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಉತ್ತರ ಪ್ರದೇಶಕ್ಕೆ ರಕ್ಷಣಾ ಕಾರಿಡಾರ್ ಘೋಷಿಸಿದಾಗ ಸ್ವಲ್ಪ ಹಿಂಜರಿಕೆ ಇತ್ತು. ತಮಿಳುನಾಡು, ಗುಜರಾತ್, ಹರಿಯಾಣ ಮತ್ತು ಇತರ ಅನೇಕ ರಾಜ್ಯಗಳಲ್ಲಿ ಕೈಗಾರಿಕಾ ವಾತಾವರಣವಿದೆ. ಉತ್ತರ ಪ್ರದೇಶದಲ್ಲಿ ಹಿಂದೆ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗೆ (ಎಂಎಸ್ಎಂಇ) ಹೆಚ್ಚಿನ ಮಹತ್ವ ಇತ್ತು. ಆದರೆ ಇಂದು ಹೂಡಿಕೆಸ್ನೇಹಿ ವಾತಾವರಣವನ್ನು ಮುಖ್ಯಮಂತ್ರಿಗಳು ನಿರ್ಮಿಸಿ ತೋರಿಸಿದ್ದಾರೆ’ ಎಂದು ಹೇಳಿದ್ದಾರೆ.
‘ಯೋಗಿ ಆದಿತ್ಯನಾಥರ ಬಗ್ಗೆ ನನಗೆ ಹೆಮ್ಮೆಯಿದೆ. ಅವರು ದೊಡ್ಡ ರಾಷ್ಟ್ರೀಯ ಹಿತಾಸಕ್ತಿಯನ್ನು ಅರ್ಥಮಾಡಿಕೊಂಡು ಅದನ್ನು ರಾಜ್ಯದ ನೀತಿಗಳಾಗಿ ಪರಿವರ್ತಿಸಿ ಕೊನೆಯ ಹಂತದ ವರೆಗೆ ಕೊಂಡೊಯ್ಯುತ್ತಾರೆ’ ಎಂದು ನಿರ್ಮಲಾ ಶ್ಲಾಘಿಸಿದ್ದಾರೆ.
ಗಂಗಾ ಎಕ್ಸ್ಪ್ರೆಸ್ವೇ ಯೋಜನೆಯು ರಾಜ್ಯದ ಆರ್ಥಿಕತೆಯ ಬೆನ್ನೆಲುಬಾಗಲಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಜತೆಗೆ, ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ನಿರ್ಮಲಾ ಸೀತಾರಾಮನ್ ಹಣಕಾಸು ನೆರವು ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.