ಮಂಗಳೂರು;ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಜನವರಿ 22ರಂದು ನಡೆಯಲಿದೆ. ಕಾರ್ಯಕ್ರಮಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ಈಗಾಗಲೇ ಗಣ್ಯರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಲಾಗುತ್ತಿದೆ. ಸೆಲೆಬ್ರೆಟಿಗಳು ಸೇರಿದಂತೆ ಬೇರೆ ಬೇರೆ ಕ್ಷೇತ್ರದ ಗಣ್ಯರು, ಧಾರ್ಮಿಕ ಮುಖಂಡರು, ಸ್ವಾಮೀಜಿಗಳನ್ನು ಆಹ್ವಾನಿಸಲಾಗಿದೆ. ಆದರೆ ಕಾರ್ಯಕ್ರಮದಿಂದ ಕರಾವಳಿಯ ಬ್ರಾಹ್ಮಣೇತರ ಸ್ವಾಮೀಜಿಗಳನ್ನು ದೂರ ಇರಿಸಲಾಗಿದೆ ಎಂಬ ಚರ್ಚೆ ಜೋರಾಗಿದೆ.
ಈ ಹಿಂದೆ ಹಿಂದುತ್ವದ ಹೋರಾಟಗಳಲ್ಲಿ, ರಾಮಜನ್ಮಭೂಮಿಯ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಸ್ವಾಮೀಜಿಗಳಿಗೆ ಇದುವರೆಗೂ ಯಾವುದೇ ಆಮಂತ್ರಣ ಬಂದಿಲ್ಲ ಎನ್ನಲಾಗಿದೆ. ಈ ಹಿಂದೆ ಕೊಲ್ಯ ರಮಾನಂದ ಸ್ವಾಮೀಜಿ, ಒಡಿಯೂರು ಗುರುದೇವಾನಂದ ಸ್ವಾಮೀಜಿ, ಕೇಮಾರು ಈಶ ವಿಠಲದಾಸ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಮಾಣಿಲ ಮೋಹನದಾಸ ಸ್ವಾಮೀಜಿ ಗುರುತಿಸಿಕೊಂಡಿದ್ದರು. ರಾಮಮಂದಿರ ನಿರ್ಮಾಣ ಚಳವಳಿಯ ನೇತೃತ್ವ ವಹಿಸಿದ್ದರೂ ಇವರಿಗೆ ಯಾರಿಗೂ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಹ್ವಾನ ಬಂದಿಲ್ಲ. ರಾಮಮಂದಿರ ನಿರ್ಮಾಣಕ್ಕೆ ನಿರಂತರ ಹೋರಾಟ ಮಾಡಿದ ಬ್ರಾಹ್ಮಣೇತ್ತರ ಸ್ವಾಮೀಜಿಗಳಿಗೆ ಈ ರೀತಿ ಅವಮಾನ ಮಾಡೋದು ಎಷ್ಟರ ಮಟ್ಟಿಗೆ ಸರಿ ಅನ್ನೋ ಪ್ರಶ್ನೆ ಇದೀಗ ಹಲವರು ಕೇಳುತ್ತಿದ್ದಾರೆ. ಇನ್ನು ಈಗಾಗಲೇ ಎಲ್ ಕೆ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಷಿ ಅವರನ್ನು ವಯಸ್ಸಿನ ಕಾರಣ ನೀಡಿ ಕಾರ್ಯಕ್ರಮದಿಂದ ದೂರವಿರಿಸಿರೋದು ಆಕ್ರೋಶಕ್ಕೆ ಕಾರಣವಾಗಿದೆ.