ಬೆಂಗಳೂರು: ಕೊರೊನಾ ಜೊತೆ ಬದುಕಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸರ್ಕಾರದ ಮುಂದೆ ಯಾವುದೇ ಕಾರಣಕ್ಕೂ ಪುನಃ ಲಾಕ್ಡೌನ್ ಜಾರಿ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಜನರು ಬೆಂಗಳೂರು ಬಿಟ್ಟು ಹೋಗದಂತೆ ಮನವಿ ಮಾಡಿದ್ದಾರೆ.
ನಾನು ರಾಜ್ಯದ ಜನತೆ ಹಾಗೂ ಬೆಂಗಳೂರಿನ ನಾಗರಿಕರಿಗೆ ಮನವಿ ಮಾಡಿಕೊಳ್ಳುವುದೇನೆಂದರೆ ಲಾಕ್ಡೌನ್ ಮಾಡಲಾಗುತ್ತಿದೆ ಎಂಬುದು ಕೇವಲ ವದಂತಿ ಅಷ್ಟೇ. ಇಂತಹ ಊಹಪೋಹಗಳಿಗೆ ಯಾರೊಬ್ಬರು ಕಿವಿಗೊಡಬಾರದು ಎಂದು ಹೇಳಿದರು.
ರಾಜ್ಯ ಸರ್ಕಾರ ಎಲ್ಲಿಯೂ ಕೊರೊನಾ ನಿಯಂತ್ರಣ ಮಾಡುವಲ್ಲಿ ವಿಫಲವಾಗಿಲ್ಲ. ಮುಂಜಾಗ್ರತಾ ಕ್ರಮವಾಗಿ ಏನೇನು ಕ್ರಮಗಳನ್ನು ಕೈಗೊಳ್ಳಬೇಕಿತ್ತೊ ಎಲ್ಲವನ್ನೂ ತೆಗೆದುಕೊಂಡಿದ್ದೇವೆ. ಸಾರ್ವಜನಿಕರು ಸರ್ಕಾರದ ಜೊತೆ ಕೈ ಜೋಡಿಸಬೇಕೆಂದು ಮನವಿ ಮಾಡಿದರು.
ಬೆಂಗಳೂರಿನಲ್ಲಿ 10 ಸಾವಿರ ಹಾಸಿಗೆ ವ್ಯವಸ್ಥೆ, 450 ಆಯಂಬುಲೆನ್ಸ್ ವ್ಯವಸ್ಥೆ ಮಾಡಿದ್ದೇವೆ. ಸೋಂಕಿನ ಪ್ರಕರಣಗಳು ಹೆಚ್ಚಾದ ತಕ್ಷಣ ಜನತೆ ಗಾಬರಿಯಾಗುವುದು ಬೇಡ.
ಜನರ ಜೀವನ ಬಹುಮುಖ್ಯವಾಗಿರುವುದರಿಂದ ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಸಾರ್ವಜನಿಕರು ಅಂತರ ಕಾಪಾಡಿಕೊಂಡು ಕೋವಿಡ್ ಜೊತೆಗೆ ಬದುಕುವುದು ಅನಿವಾರ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎಂದರು.