ಬೆಂಗಳೂರು: ಗ್ರಾಮ ಪಂಚಾಯತ್ ಅಧ್ಯಕ್ಷರ ಅಧಿಕಾರವನ್ನು ಮೊಟುಕುಗೊಳಿಸುವುದಿಲ್ಲ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಪ್ರತಿಕ್ರಿಯಿಸಿದ ಕೋಟ ಶ್ರೀನಿವಾಸ ಪೂಜಾರಿ, ಚೆಕ್ ಗೆ ಸಹಿ ಹಾಕುವ ಅಧಿಕಾರವನ್ನು ಪಿಡಿಓಗೆ ಕೊಡುತ್ತಾರೆ ಎಂಬ ಆತಂಕ ಕೆಲವು ಅಧ್ಯಕ್ಷರಲ್ಲಿತ್ತು, ಆದ್ರೆ ಈ ಬಗ್ಗೆ ಯಾರೂ ಆತಂಕ ಪಡುವುದು ಬೇಡ ಎಂದು ಹೇಳಿದ್ದಾರೆ.
ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಮಾತಾಡಿದ್ದು, ಪಂಚಾಯತ್ ರಾಜ್ ವ್ಯವಸ್ಥೆಯ ಸದಸ್ಯರ ಅಧಿಕಾರವನ್ನು ಯಾವುದೇ ಕಾರಣಕ್ಕೂ ಮೊಟಕುಗೊಳಿಸುವುದಿಲ್ಲ ಅಂತಾ ಸಿಎಂ ಭರವಸೆ ನೀಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ನಮ್ಮ ಸರ್ಕಾರ ಜನಪ್ರತಿನಿಧಿಗಳಿಗೆ ಮತ್ತಷ್ಟು ಹೆಚ್ಚು ಶಕ್ತಿ ಕೊಡುತ್ತದೆ, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧ್ಯಕ್ಷರ ಹಕ್ಕನ್ನು ಮೊಟಕುಗೊಳಿಸುವುದಿಲ್ಲ ಎಂದು ಹೇಳಿರುವ ಕೋಟ ಶ್ರೀನಿವಾಸ ಪೂಜಾರಿ, ಪ್ರಸ್ತಾವನೆಯನ್ನು ಅಧಿಕಾರಿಗಳು ಕಳಿಸಿದ್ದರೂ ಅದನ್ನು ಸರ್ಕಾರ ತಿರಸ್ಕಾರ ಮಾಡುತ್ತದೆ, ಯಾವುದೇ ಸುತ್ತೋಲೆ ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ