ಬೆಂಗಳೂರು: ಹಿಜಾಬ್ ವಿವಾದದ ಸಂದರ್ಭದಲ್ಲಿ ಪರೀಕ್ಷೆಗೆ ಅವಕಾಶ ಸಿಗದವರಿಗೆ ಪರೀಕ್ಷೆಗೆ ಮತ್ತೆ ಅವಕಾಶ ಕೊಡಬೇಕು ಎಂದು ಉಡುಪಿ ಶಾಸಕ ರಘುಪತಿ ಭಟ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಇಂದು ವಿಷಯ ಪ್ರಸ್ತಾಪಿಸಿದ ರಘುಪತಿ ಭಟ್, ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆಯುವವರಿಗೆ ಅವಕಾಶ ಕೊಡಬೇಕು ಎಂದು ಒತ್ತಾಯ ಮಾಡಿದ್ದು, ಕೋರ್ಟ್ ತೀರ್ಪು ಬಂದ ಬಳಿಕವೂ ಕಾಲೇಜುಗಳಲ್ಲಿ ವಿವಾದ ಎಬ್ಬಿಸುವವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ವಿಧಾನಸಭೆಯಲ್ಲಿ ರಘುಪತಿ ಭಟ್ ಬೆಂಬಲಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕೋರ್ಟ್ ಆದೇಶ ಉಲ್ಲಂಘನೆ ಆಗುತ್ತಿರುವ ಬಗ್ಗೆ ಸದನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರ ಕೂಡಲೇ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ
ರಘುಪತಿ ಭಟ್ ಪ್ರಸ್ತಾಪಕ್ಕೆ ಉತ್ತರಿಸಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಕೋರ್ಟ್ ತೀರ್ಪು ಕೊಟ್ಟ ಮೇಲೆ ಅದನ್ನು ಒಪ್ಪಿಕೊಂಡು ಜಾರಿ ಮಾಡಲೇಬೇಕು. ಮಧ್ಯಂತರ ಆದೇಶಕ್ಕಿಂತ ಮೊದಲು ಪರೀಕ್ಷೆ ಬರೆಯದವರಿಗೆ ಮತ್ತೆ ಅವಕಾಶ ಕೊಡಬಹುದು. ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇನೆ. ಮಧ್ಯಂತರ ಆದೇಶದ ಬಳಿಕ ಪರೀಕ್ಷೆಗೆ ತಪ್ಪಿಸಿಕೊಂಡರೆ ಮರು ಪರೀಕ್ಷೆ ಕೊಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.