ಕಡಬ : ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯ ಗಾಯವನ್ನು ಶುಚಿಗೊಳಿಸದೇ ಸ್ಟಿಚ್ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಡಬ ಸಮುದಾಯ ಆಸ್ಪತ್ರೆ ಸಿಬ್ಬಂದಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಕುಮಾರ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳೊಂದಿಗೆ ನಾನು ಮಾತನಾಡಿದ್ದೇನೆ. ಅವರ ಪ್ರಕಾರ ಅಪಘಾತಕ್ಕೊಳಗಾದ ಗಾಯಾಳುವಿಗೆ ತಕ್ಷಣಕ್ಕೆ ಪ್ರಾಥಮಿಕ ಚಿಕಿತ್ಸೆ ನೀಡಿ ಖಾಸಗಿ ವೈದ್ಯರಲ್ಲಿಗೆ ಹೋಗುವಂತೆ ಸೂಚನೆ ನೀಡಿದ್ದರು.
ಗಾಯಾಳು ಈ ಸೂಚನೆಯನ್ನು ಪಾಲಿಸದೆ ಮನೆಗೆ ತೆರಳಿದ್ದಾರೆ .ಕೆಲ ದಿನಗಳ ಬಳಿಕ ಗಾಯ ಉಲ್ಬಣಗೊಂಡು ನೋವು ಕಾಣಿಸಿದ ಹಿನ್ನೆಲೆ ಖಾಸಗಿ ವೈದ್ಯರನ್ನು ಭೇಟಿಯಾಗಿದ್ದಾರೆ. ಅಲ್ಲಿ ಎಕ್ಸ್ರೇ ಮಾಡಿ ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಗಾಯವಿರುವ ಭಾಗದಲ್ಲಿ ಕಲ್ಲು ಹಾಗೂ ಮಣ್ಣಿನ ಕಣಗಳು ಇದ್ದು, ಅಲರ್ಜಿ ಆಗಿರುವುದು ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದೊಂದು ಅಲ್ಲಿನ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ನಿರ್ಲಕ್ಷ್ಯತನವೆಂದು ಕಂಡು ಬಂದಿದೆ.
ಈ ಹಿನ್ನೆಲೆ ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಅಲ್ಲದೇ, ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕೆಂದು ತಿಳಿಸಿದ್ದೇನೆ. ಈ ಪ್ರಕರಣದಲ್ಲಿ ನಿರ್ಲಕ್ಷ್ಯವಾಗಿರುವುದು ದೃಢಪಟ್ಟಲ್ಲಿ ಸಂಬಂಧಪಟ್ಟವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದಿದ್ದಾರೆ.