ಬೆಂಗಳೂರು: ರಾಜ್ಯ ಸರ್ಕಾರ ಓಬವ್ವ ಆತ್ಮರಕ್ಷಣಾ ಕಲೆಯನ್ನು ಆರನೇ ತರಗತಿಯವರೆಗೆ ವಿಸ್ತರಿಸಲು ತೀರ್ಮಾನಿಸಿದೆ.
ಬೆಂಗಳೂರಿನಲ್ಲಿ ಇಂದು ಸುದ್ದಿ ಗೋಷ್ಠಿಯಲ್ಲಿ
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಘೋಷಣೆ ಮಾಡಿದ್ದಾರೆ.
ಈ ವರೆಗೆ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ನ 24,000 ವಿದ್ಯಾರ್ಥಿನಿಯರಿಗೆ ಓಬವ್ವ ಆತ್ಮರಕ್ಷಣೆ ಕಲೆ ತರಬೇತಿ ನೀಡಲಾಗುತ್ತಿತ್ತು. ಪ್ರಸಕ್ತ ಸಾಲಿನಲ್ಲಿ ಪ್ರಿ ಮೆಟ್ರಿಕ್ ವಿದ್ಯಾರ್ಥಿನಿಯರು ಸೇರಿ ಒಟ್ಟು 50 ಸಾವಿರ ವಿದ್ಯಾರ್ಥಿನಿಯರು ತರಬೇತಿ ಪಡೆಯಲಿದ್ದಾರೆ. ಇದಕ್ಕಾಗಿ ಹೆಚ್ಚುವರಿ 5 ಕೋಟಿ ರೂಪಾಯಿ ಖರ್ಚು ಆಗಲಿದೆ.
ಈ ವರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ 300 ಶಾಲೆಗಳಲ್ಲಿ 100 ವಿದ್ಯಾರ್ಥಿನಿಯರಂತೆ ಒಟ್ಟು 30,000 ವಿದ್ಯಾರ್ಥಿನಿಯರು ಓಬವ್ವ ಆತ್ಮ ರಕ್ಷಣಾ ಕಲೆ ತರಬೇತಿ ಪಡೆದಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿಯಾಗಿ 520 ವಸತಿ ಶಾಲೆಗಳ 82,000 ವಿದ್ಯಾರ್ಥಿನಿಯರು ತರಬೇತಿಗೆ ಒಳಪಡಲಿದ್ದಾರೆ. ಒಟ್ಟಾರೆ 1,15,000 ವಿದ್ಯಾರ್ಥಿನಿಯರು ತರಬೇತಿ ಪಡೆಯಲಿದ್ದು,
ಅಂದಾಜು 17 ಕೋಟಿ ವೆಚ್ಚವಾಗಲಿದೆ.
ಕಳೆದ ಸಾಲಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಪ್ರಾಯೋಗಿಕವಾಗಿ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿನಿಯರಿಗೆ ಮಾತ್ರ ತರಬೇತಿ ನೀಡಲಾಗಿತ್ತು.
ಪ್ರಸಕ್ತ ಸಾಲಿನಲ್ಲಿ 630 ಪೋಸ್ಟ್ ಮೆಟ್ರಿಕ್ ಹಾಗೂ 200 ಪ್ರಿಮೆಟ್ರಿಕ್ ವಿದ್ಯಾರ್ಥಿ ನಿಲಯದಲ್ಲಿ 85,000 ವಿದ್ಯಾರ್ಥಿನಿಯರು ತರಬೇತಿಗೆ ಒಳಪಡಲಿದ್ದಾರೆ.