ಮಂಗಳೂರು: ಇಲ್ಲಿನ ಎಂಎಸ್ಇಝಡ್ ಅನ್ನುವ ಸರ್ಕಾರಿ ಕಂಪೆನಿಯ ಅಧಿಕಾರಿಗಳು ತನ್ನ ವ್ಯಾಪ್ತಿಯಲ್ಲಿರೋ ಕಾಂತೇರಿ ಜುಮಾದಿ ದೇವಸ್ಥಾನದ ಆಚರಣೆಗೆ ತಡೆ ಒಡ್ಡಿದ ಆರೋಪ ಕೇಳಿ ಬಂದಿದೆ.
ಕಾಂತೇರಿ ಜುಮಾದಿ ದೈವಸ್ಥಾನವು ಮಂಗಳೂರು ಹೊರವಲಯದ ಬಜಪೆ ಗ್ರಾಮದ ನೆಲ್ಲಿದಡಿ ಗುತ್ತುವಿನಲ್ಲಿದ್ದು, ಈ ದೈವಸ್ಥಾನಕ್ಕೆ 800 ವರ್ಷಗಳ ಇತಿಹಾಸವಿದೆ. ಆದರೆ 2006ರಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಸಾವಿರಾರು ಎಕರೆ ಜನವಸತಿ ಜಾಗ ಸರ್ಕಾರದಿಂದ ಭೂ ಸ್ವಾಧೀನವಾಗಿತ್ತು. ಅಂದು ಯಾವ ಕಾರಣಕ್ಕೂ ನಾನು ಈ ಮಣ್ಣನ್ನು ಬಿಡುವುದಿಲ್ಲ ಎಂದು ದೈವ ನುಡಿದ ಕಾರಣದಿಂದಾಗಿ ಇಂದಿನವರೆಗೂ ಆ ಸಾವಿರಾರು ಎಕರೆ ಕೈಗಾರಿಕಾ ಪ್ರದೇಶದಲ್ಲಿ ಏಕಾಂಗಿಯಾಗಿ ಕಾಂತೇರಿ ಜುಮಾದಿ ದೈವದ ದೈವಸ್ಥಾನವಿದೆ. ಆದರೆ ಇದೀಗ ಕಂಪೆನಿಯ ಅಧಿಕಾರಿಗಳು ಮುಂದಿನ ದಿನಗಳಿಂದ ದೈವ ಸ್ಥಾನಕ್ಕೆ ತೆರಳಿ ನಿತ್ಯ ಆರಾಧನೆಗೆ ಅವಕಾಶವನ್ನು ನಿರಾಕರಿಸುವ ಮೂಲಕ ತುಳುನಾಡಿನ ಆಸ್ಮಿತೆ, ನಂಬಿಕೆ ಮೇಲೆ ಸವಾರಿ ಮಾಡಲು ಹೊರಟಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.
ಇಂತಹದ್ದೇ ಮಾತು 2016ರಲ್ಲಿಯೂ ಬಂದಿದ್ದು, ಆಗ ಕಂಪೆನಿಯು ನೆಲ್ಲಿದಡಿ ಗುತ್ತನ್ನು ನೆಲಸಮ ಮಾಡಲು ಯತ್ನಿಸಿತ್ತು. ಆದರೆ ಅಂದಿನ ಜಿಲ್ಲಾಧಿಕಾರಿ ದೈವಸ್ಥಾನವನ್ನು ಒಂದು ಸ್ಮಾರಕದ ಹಾಗೆ ಉಳಿಸಿಕೊಳ್ಳುವ ಭರವಸೆಯನ್ನ ನೀಡಿದ್ದು, . 2016ರ ಡಿಸೆಂಬರ್ನಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿಯೂ ಆರಾಧನೆಯನ್ನು ಮಾಡುವ ಭರವಸೆಯನ್ನು ನೀಡಲಾಗಿತ್ತು. ಈ ನಿಟ್ಟಿನಲ್ಲಿ ನೆಲ್ಲಿದಡಿಗುತ್ತು ಹಾಗೂ ಊರಿನವರು ಎಂಎಸ್ಇಝೆಡ್ ಅಧಿಕಾರಿಗಳಿಗೆ ಮಾಹಿತಿ ನೀಡಿ, ದೈವಸ್ಥಾನಕ್ಕೆ ತೆರಳಿ ಸೇವಾ ಕೆಲಸವನ್ನು ಮಾಡಿಕೊಂಡು ಬರುತ್ತಿದ್ದರು. ಆದರೆ ಫೆ.12ರಂದು ಗ್ರಾಮಸ್ಥರು ಸಂಕ್ರಮಣ ಸೇವೆ ಮಾಡಲು ತೆರಳುವ ಸಲುವಾಗಿ ಎಂಎಸ್ಇಝೆಡ್ ಕಂಪನಿಗೆ ಮನವಿ ಪತ್ರ ನೀಡಿದ್ದು, ಆಗ ಕಂಪೆನಿಯ ಅಧಿಕಾರಿಗಳು ಇದೊಂದು ಕೊನೆಯ ಅವಕಾಶವಾಗಿದ್ದು, ಮುಂದಿನ ದಿನಗಳಿಂದ ಆರಾಧನೆಗೆ ಅವಕಾಶವಿರುವುದಿಲ್ಲವೆಂದು ತಿಳಿಸಿದ್ದಾರೆ ಎನ್ನಲಾಗಿದೆ.