ಉಡುಪಿ: ಉಡುಪಿ ಜಿಲ್ಲೆಯಲ್ಲಿ ಐದು ದಿನ ಆರೆಂಜ್ ಅಲರ್ಟ್ ಘೋಷಿಸಲ್ಪಟ್ಟಿದೆ. ಜಿಲ್ಲೆಯಲ್ಲಿ ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ ಜಿಲ್ಲೆಯ ಜನರು ಮುನ್ನೆಚ್ಚರಿಕೆಯಿಂದಿರಬೇಕು ಹಾಗೂ ಬೀಚ್ ಗೆ ಆಗಮಿಸುವ ಪ್ರವಾಸಿಗರು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಇದರ ಜೊತೆಯಲ್ಲೇ ಸಮುದ್ರ ಪ್ರಕ್ಷ್ಯುಬ್ದವಾಗಿರುವುದರಿಂದ ನೀರಿಗಿಳಿಯದಂತೆ, ಮೀನುಗಾರರು ಕೂಡಾ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. 80 ಮಿಲಿ ಮೀಟರ್ ಮಳೆ ಬೀಳುವ ಸಾಧ್ಯತೆ ಇದ್ದು, ಕಾಪು, ಉಡುಪಿ, ಕುಂದಾಪುರ ಮತ್ತು ಬೈಂದೂರು ತಾಲೂಕುಗಳಲ್ಲಿ ನಾಡದೋಣಿ ಮೀನುಗಾರಿಕೆ ತಾತ್ಕಾಲಿಕ ಸ್ಥಗಿತಕ್ಕೆ ಜಿಲ್ಲಾಡಳಿತ ಸೂಚಿಸಿದೆ. ತೊಂದರೆ ಉಂಟಾದಲ್ಲಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರರು ಹಾಗೂ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ಸಂಪರ್ಕಿಸುವಂತೆ ಜಿಲ್ಲಾಡಳಿತ ಸಲಹೆ ನೀಡಿದೆ.
ಅಲ್ಲದೇ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವುದೇ ಸರ್ಕಾರಿ ಅಧಿಕಾರಿಗಳಿಗೂ ರಜೆ ನೀಡಿಲ್ಲ, ಎಲ್ಲಾ ಅಧಿಕಾರಿಗಳೂ ಕೇಂದ್ರ ಸ್ಥಾನದಲ್ಲಿ ಅಲರ್ಟ್ ಆಗಿರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅಲ್ಲದೇ ಉಡುಪಿ ಜಿಲ್ಲಾಡಳಿತ ಮಳೆ ಎದುರಿಸಲು ಸರ್ವ ಸನ್ನಧ್ದವಾಗಿದ್ದು ಜಿಲ್ಲೆಯ ಜನರು ಯಾವುದೇ ಆತಂಕಕ್ಕೊಳಗಾಗದಂತೆಯೂ ಡಿಸಿ ಜಗದೀಶ್ ಹೇಳಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಮತ್ತು ಕೊಡಗು ಜಿಲ್ಲೆಯಲ್ಲಿ ಕೂಡಾ ನಿರಂತರ ಮಳೆ ಮುಂದುವರಿದಿದೆ. ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ಸೇರಿ ಹಲವೆಡೆ ನಿರಂತರ ಮಳೆ ಸುರಿದಿದೆ. ಭಾರೀ ಮಳೆಯಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದ್ದು, ನದಿ, ತೊರೆಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ.