ಕಾರವಾರ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಜನಪದ ಕೋಗಿಲೆ ಸುಕ್ರಿ ಬೊಮ್ಮ ಗೌಡ(88) ವಿಧಿವಶರಾಗಿದ್ದಾರೆ. ಸುಕ್ರಿ ಬೊಮ್ಮ ಗೌಡ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಕೆಲವು ದಿನದ ಹಿಂದೆ ಉಸಿರಾಟ ಸಮಸ್ಯೆಯಿಂದ ಉಡುಪಿಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ಆದರೆ ಇಂದು ಮುಂಜಾನೆ 4 ಗಂಟೆ ಸಮಯಕ್ಕೆ ಅಂಕೋಲದ ಬಡಿಗೇರಿಯ ಅವರ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಾಲಕ್ಕಿ ಒಕ್ಕಲಿಗ ಜನಾಂಗಕ್ಕೆ ಸೇರಿದ ಸುಕ್ರಿ ಬೊಮ್ಮಗೌಡ ಅವರು ಸುಪ್ರಸಿದ್ಧ ಜಾನಪದ ಗಾಯಕಿಯಾಗಿದ್ದರು. ಸುಮಾರು 5 ಸಾವಿರ ಹಾಲಕ್ಕಿ ಹಾಡುಗಳು ಕಂಠಪಾಠವಾಗಿದ್ದವು. ಅವರು ಜಾನಪದ ಕಲೆಗೆ ನೀಡಿದ ಕೊಡುಗೆಗಳಿಗಾಗಿ ಮತ್ತು ಸಾಂಪ್ರದಾಯಿಕ ಬುಡಕಟ್ಟು ಸಂಗೀತವನ್ನು ಸಂರಕ್ಷಿಸುವ ಕಾರ್ಯಕ್ಕಾಗಿ ಹಲವು ಪ್ರಶಸ್ತಿಗಳನ್ನು ಸಂಪಾದಿಸಿದ್ದಾರೆ.
ಜನಪದ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಕ್ಕೆ ಸುಕ್ರಿ ಬೊಮ್ಮ ಗೌಡ ನೀಡಿರುವ ಕೊಡುಗೆ ಗುರುತಿಸಿ, 1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ, 2017ರಲ್ಲಿ ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಇನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ದೇಶ ಹಾಗೂ ರಾಜ್ಯದ ಹಲವು ಪ್ರತಿಷ್ಠಿತ ಪ್ರಶಸ್ತಿಗೆ ಸುಕ್ರಿ ಬೊಮ್ಮ ಗೌಡ ಭಾಜನರಾಗಿದ್ದರು.