ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಪವಿತ್ರಾ ಗೌಡ ಅವರ ಮಾಜಿ ಪತಿ ಸಂಜಯ್ ಸಿಂಗ್ ನಿಧನರಾಗಿದ್ದಾರೆ. ಸುಮಾರು 7-8 ತಿಂಗಳ ಹಿಂದೆಯೇ ಅವರು ಮೃತರಾಗಿದ್ದು, ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ದೀರ್ಘಕಾಲದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಂಜಯ್ ಸಿಂಗ್ ಅವರು ಉತ್ತರಪ್ರದೇಶದ ಗೋರಖ್ಪುರದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಪವಿತ್ರಾ ಗೌಡ ಅವರಿಂದ ವಿಚ್ಛೇದನ ಪಡೆದ ನಂತರ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು, ಮದ್ಯಪಾನಕ್ಕೆ ದಾಸರಾಗಿದ್ದರು ಎನ್ನಲಾಗಿದೆ. ಇದೇ ಚಟ ಅವರ ಆರೋಗ್ಯ ಹದಗೆಡಲು ಪ್ರಮುಖ ಕಾರಣವಾಯಿತು ಎಂದು ತಿಳಿದುಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಅವರು ಪೊಲೀಸರ ವಶವಾದಾಗ, ಸಂಜಯ್ ಸಿಂಗ್ ವಿಚಾರಣೆಯ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದರು. ಇಲ್ಲಿಂದ ತಮ್ಮ ಸ್ವಊರಿಗೆ ಮರಳಿದ ಕೆಲವೇ ತಿಂಗಳಲ್ಲಿ ಅವರು ಕೊನೆಯುಸಿರೆಳೆದಿದ್ದು, ಇದೀಗ ವಿಷಯ ತಡವಾಗಿ ಹೊರಬಿದ್ದಿದೆ.


