ಕೊಲ್ಲೂರು: ಕೊಲ್ಲೂರು ದೇವಸ್ಥಾನ ವ್ಯಾಪ್ತಿಯ ಆಸುಪಾಸಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರ ಜೊತೆಗೆ ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ. ಅವರು ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನ ಸಮಿತಿಯ ಆಡಳಿತ ಕಚೇರಿ ಸಭಾಂಗಣದಲ್ಲಿ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಡೆದ ವ್ಯವಸ್ಥಾಪನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ರು.
ಮೂಕಾಂಬಿಕಾ ದೇವಸ್ಥಾನ ಸೇರಿದಂತೆ ಪರಿಸರ ವ್ಯಾಪ್ತಿಯಲ್ಲಿ, ಎಪ್ರಿಲ್, ಮೇ ಹಾಗೂ ಜೂನ್ ತಿಂಗಳ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರಕ್ಕೆ ಪ್ರತ್ಯೇಕ ಸಹಾಯವಾಣಿ ತೆರೆದು, ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು. ಈಗಾಗಲೇ ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಕೈಗೊಂಡಿರುವ ನೀರು ಸರಬರಾಜು ಘಟಕದ ನಿರ್ವಹಣೆಯನ್ನು ದೇವಸ್ಥಾನ ಹಾಗೂ ಸ್ಥಳಿಯ ಗ್ರಾಪಂಗಳ ಸಹಯೋಗದೊಂದಿಗೆ ಉತ್ತಮ ರೀತಿಯಲ್ಲಿ ಕೈಗೊಳ್ಳುವಂತೆ ಸೂಚಿಸಿದರು.
ಕೊಲ್ಲೂರು ವ್ಯಾಪ್ತಿಯಲ್ಲಿ ಕೈಗೊಂಡಿರುವ ಯುಜಿಡಿ ಕಾಮಗಾರಿಗಳು ಈಗಾಗಲೇ ಪೂರ್ಣ ಪ್ರಮಾಣದಲ್ಲಿ ಮುಗಿದಿದ್ದು, ೩೩೪ ಕಟ್ಟಡಗಳಿಗೆ ಸಂಪರ್ಕ ನೀಡಲಾಗಿದೆ. ಬಾಕಿ ಉಳಿದ ಕಟ್ಟಡಗಳಿಗೂ, ಶೀಘ್ರದಲ್ಲಿ ಯುಜಿಡಿ ಸಂಪರ್ಕ ವನ್ನು ಕಲ್ಪಿಸುವ ಮೂಲಕ ಕೊಲ್ಲೂರು ದೇವಸ್ಥಾನ ವ್ಯಾಪ್ತಿಯ ತ್ಯಾಜ್ಯ ನೀರು, ಸೌಪರ್ಣಿಕ ನದಿಯನ್ನು ಸೇರಿ ಕಲುಷಿತಗೊಳಿಸದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ರು.