ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೀವ ರಕ್ಷಣೆ ಮಾಡುವ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ನವದೆಹಲಿಯಲ್ಲಿ ಸಂಸತ್ ಭವನದಲ್ಲಿರುವ ಅರಣ್ಯ ಸಚಿವರ ಕಚೇರಿಯಲ್ಲಿ ನಡೆದ ಈ ಭೇಟಿಯ ವೇಳೆ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಶಿವಮೊಗ್ಗ ಮತ್ತು ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಆನೆಗಳ ದಾಳಿ ಬಗ್ಗೆ ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ.
ರಾಜ್ಯದಲ್ಲಿ ವನ್ಯಜೀವಿ ಉಪಟಳ ನಿರಂತರವಾಗಿ ನಡೆಯುತ್ತಿದ್ದು, ರೈತರು ಬಲಿಯಾಗಿ ಅನೇಕರು ಗಾಯಗೊಂಡು ಶಾಶ್ವತವಾಗಿ ಅಂಗವೈಕಲ್ಯಕ್ಕೆ ತುತ್ತಾಗುತ್ತಿದ್ದಾರೆ. ಕರ್ನಾಟಕದಲ್ಲಿ ಈ ಸಮಸ್ಯೆ ಬಿಗಡಾಯಿಸಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಹೆಚ್.ಡಿ. ಕುಮಾರಸ್ವಾಮಿ ಭೂಪೇಂದ್ರ ಯಾದವ್ ಅವರನ್ನು ವಿನಂತಿಸಿದ್ದಾರೆ.
ಕುಮಾರಸ್ವಾಮಿ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಭೂಪೇಂದ್ರ ಯಾದವ್, ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನ ಮುಗಿಯುವುದರೊಳಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿ ಅತ್ಯಂತ ತ್ವರಿತವಾಗಿ ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.


