ಬೆಂಗಳೂರು: ಶಿರೂರು ಮಠಕ್ಕೆ ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಗಳನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಈ ವಿಚಾರವಾಗಿ ಶೀರೂರು ಮಠದ ಹಿಂದಿನ ಪೀಠಾಧಿಪತಿಯ ಸಹೋದರರಾದ ಲಾತವ್ಯ ಆಚಾರ್ಯ ಹಾಗೂ ಶ್ರೀನಿವಾಸ ಆಚಾರ್ಯ, ಶ್ರೀನಿವಾಸ ಆಚಾರ್ಯ ಅವರ ಮಗ ಮತ್ತು ಲಾತವ್ಯ ಆಚಾರ್ಯ ಅವರ ಮಗ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಅವರ ಪೀಠವು ಬುಧವಾರ ಪ್ರಕಟಿಸಿತು.
ಅಪ್ರಾಪ್ತರು ಸನ್ಯಾಸ ಸ್ವೀಕರಿಸಲು, ಮಠಾಧಿಪತಿಯಾಗಲು ಯಾವ ಕಾನೂನಿನಲ್ಲೂ ನಿರ್ಬಂಧವಿಲ್ಲ. ಪ್ರಕರಣದಲ್ಲಿ ಅಪ್ರಾಪ್ತನ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ ಎಂಬುದನ್ನು ಸಾಬೀತುಪಡಿಸಲು ಅರ್ಜಿದಾರರು ವಿಫಲರಾಗಿದ್ದಾರೆ. 800 ವರ್ಷಗಳಿಗೂ ಹಿಂದಿನಿಂದ ನಡೆದುಕೊಂಡು ಬಂದಿರುವ ಪದ್ಧತಿಯಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವ ಅಗತ್ಯತೆ ಕಂಡುಬರುತ್ತಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ವಿಭಾಗೀಯ ಪೀಠ, ಅರ್ಜಿಯನ್ನು ಬುಧವಾರ ವಜಾಗೊಳಿಸಿ ತೀರ್ಪು ಪ್ರಕಟಿಸಿದೆ.