ಮಂಗಳೂರು: ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ ಹಿನ್ನೆಲೆಯಲ್ಲಿ ಮಂಗಳೂರಿನ ಪೊಲೀಸ್ ಆಯುಕ್ತಾಲಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯು ಜಿಲ್ಲೆಯಲ್ಲಿ ಕಟ್ಟೆಚ್ಚರವನ್ನು ವಹಿಸಿದೆ.
ಬೀಟ್ ಪೊಲೀಸರು, ಚೆಕ್ಪೋಸ್ಟ್ಗಳಲ್ಲಿರುವ ಪೊಲೀಸರು ಹೆಚ್ಚು ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದ್ದು, ರಾತ್ರಿ ವೇಳೆ ಗಸ್ತು ಹೆಚ್ಚಿಸುವ ನಿಟ್ಟಿನಲ್ಲಿಯೂ ಠಾಣಾ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿದು ಬಂದಿದೆ.
ವಿವಿಧ ಧಾರ್ಮಿಕ ಕೇಂದ್ರಗಳು, ಬೀಚ್ ಸಹಿತ ವಿವಿಧ ಪ್ರವಾಸಿ ತಾಣ, ವಿಮಾನ ನಿಲ್ದಾಣ, ಬಂದರು, ವಿವಿಧ ಕೇಂದ್ರ ಸರಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಭದ್ರತೆ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸದಂತೆ ಈಗಾಗಲೇ ಜಿಲ್ಲಾಡಳಿತದಿಂದಲೂ ಸೂಚನೆ ರವಾನೆಯಾಗಿದೆ.
ಸಮುದ್ರ ತೀರದಲ್ಲಿ ಕೋಸ್ಟ್ ಗಾರ್ಡ್ ಕಟ್ಟೆಚ್ಚರ ವಹಿಸಿದ್ದು, ರೈಲು ನಿಲ್ದಾಣದಲ್ಲಿಯೂ ಪೊಲೀಸ್ ರೈಲ್ವೇ ಪೊಲೀಸರಿಗೆ ಇಲಾಖೆ ಈಗಾಗಲೇ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳ ಮೇಲೆಯೂ ತೀವ್ರ ನಿಗಾ ವಹಿಸಲಾಗುತ್ತಿದೆ.