ಬೆಂಗಳೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಮೂವರು ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ರದ್ದುಪಡಿಸಿ ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ್ ಶಾಸ್ತ್ರಿ ನ್ಯಾ.ಅನಿಲ್ ಕೆ.ಕಟ್ಟಿ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿದೆ.
ಪ್ರವೀಣ್ ನೆಟ್ಟಾರು ಹತ್ಯೆಯ ಸಂಚಿನಲ್ಲಿ ಭಾಗಿಯಾದ ಆರೋಪವಿರುವ ಕೆ.ಇಸ್ಮಾಯಿಲ್ ಶಫಿ, (ಆರೋಪಿ 9), ಕೆ.ಮೊಹಮ್ಮದ್ ಇಕ್ವಾಲ್ (ಆರೋಪಿ 10) ಹಾಗೂ ಎಂ.ಶಾಹೀದ್ (ಆರೋಪಿ 11) ಅವರು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಜಾಮೀನಿಗರ ಅರ್ಜಿ ಸಲ್ಲಿಸಿರುವ ಆರೋಪಿಗಳು ಪ್ರಕರಣದಲ್ಲಿ ಸಕ್ರಿಯ ಪಾತ್ರ ವಹಿಸಿರುವುದನ್ನು ತೋರಿಸಲು ಸೂಕ್ತ ಸಾಕ್ಷ್ಯಧಾರಗಳು ಲಭ್ಯವಿದೆ. ಪ್ರವೀಣ್ ನೆಟ್ಟಾರು ಮೇಲೆ ದಾಳಿ ನಡೆದ ವೇಳೆ ಸ್ಥಳದಲ್ಲಿ ಈ ಮೂರು ಆರೋಪಿಗಳು ಪ್ರತ್ಯಕ್ಷವಾಗಿ ಹಾಜರಲಿಲ್ಲ. ಆದರೆ, ಪ್ರವೀಣ್ ನೆಟ್ಟಾರು ಹತ್ಯೆಗೆ ಯೋಜನೆ ರೂಪಿಸಲು ಹಮ್ಮಿಕೊಂಡಿದ್ದ ಸಂಚಿನ ಸಭೆಯಲ್ಲಿ ಭಾಗವಹಿಸಿದ್ದರು ಹಾಗೂ ಹತ್ಯೆ ಯೋಜನೆ ಬಗ್ಗೆ ಚರ್ಚಿಸಿದ್ದರು. ಸಂಚು ರೂಪಿಸಲು ಯಾವುದೇ ಬಹಿರಂಗ ಕಾಣಿಸಬೇಕೇಂದೇನು ಇಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ನಾಲ್ವರು ಸಾಕ್ಷಿಗಳ ಹೇಳಿಕೆ ಪ್ರಕಾರ ಆರೋಪಿಗಳು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.ತನಿಖಾಧಿಕಾರಿಗಳು ಸಂಗ್ರಹಿಸಿರುವ ಆರೋಪಿಗಳ ಪೋನ್ ಕರೆಗಳ ವಿವರಗಳು ಸಹ ಪ್ರಕರಣದಲ್ಲಿ ಮೇಲ್ಮನವಿದಾರ ಆರೋಪಿಗಳು ಪಿತೂರಿ ನಡೆಸುವುದನ್ನು ತೋರಿಸುತ್ತದೆ. ಆರೋಪಿಗಳು ಪ್ರಕರಣದಲ್ಲಿ ನಿರ್ದಿಷ್ಟ, ಸಕ್ರಿಯ ಮತ್ತು ಗಮನಾರ್ಹ ಪಾತ್ರ ನಿರ್ವಹಿಸುವುದನ್ನು ಮೇಲ್ನೋಟಕ್ಕೆ ದೃಢಪಡಿಸುವ ಸಾಕ್ಷ್ಯಗಳು ನ್ಯಾಯಾಲಯದ ಮುಂದಿದೆ ಎಂದು ಪೀಠ ಆದೇಶದಲ್ಲಿ ಹೇಳಿದೆ.
ಮೇಲ್ಮನವಿದಾರರು ಪ್ರವೀಣ್ ನೆಟ್ಟಾರು ಹತ್ಯೆಯ ಪಿತೂರಿಯಲ್ಲಿ ಭಾಗವಹಿಸಿರುವುದು ಸತ್ಯವಾಗಿದ್ದು, ಅದು ಭಯೋತ್ಪಾದಕ ಕೃತ್ಯವನ್ನು ಸಮರ್ಥಿಸುವ, ಪ್ರೋತ್ಸಾಹಿಸುವ ಕೆಲಸವಾಗಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ ಅಡಿ (ಯುಎಪಿಎ) ಆರೋಪಿಗಳ ನಡೆಸಿರುವ ಕೃತ್ಯವು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದ ಪೀಠ ಮೇಲ್ಮನವಿಯನ್ನು ವಜಾಗೊಳಿಸಿದೆ.
ಈ ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿ 49ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ (ಎನ್ಐಎ ವಿಶೇಷ ನ್ಯಾಯಾಲಯ) 2023 ರ ಏ. 29ರಂದು ಆದೇಶಿಸಿತು. ಇದರಿಂದಾಗಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆರೋಪಿಗಳ ವಿರುದ್ಧದ ಪ್ರಕರಣವು ಎನ್ಐಎ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.