ಬೆಂಗಳೂರು: ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಅಯೋಧ್ಯೆಯ ಶ್ರೀರಾಮ ಮಂದಿರದ ದೇವತಾ ಕಾರ್ಯಗಳನ್ನು ಮುಗಿಸಿ, ಮಾರ್ಚ್ 14ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ
ಈ ಹಿನ್ನೆಲೆಯಲ್ಲಿ ಮಾರ್ಚ್ 14 ರಂದು ಬೆಂಗಳೂರಿನಲ್ಲಿ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ಭವ್ಯ ಸ್ವಾಗತ ಕಾರ್ಯಕ್ರಮ ಆಯೋಜಿಸಲಾಗಿದೆ.
ರಾಮಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿಗಳಾಗಿರುವ ಪೇಜಾವರ ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯಿಂದ 48 ದಿನಗಳ ಕಾಲ ಮಂಡಲ ಪೂಜೆ, ಪಲ್ಲಕ್ಕಿ ಉತ್ಸವ ಹಾಗೂ ನಿತ್ಯ ಪೂಜೆಗಳನ್ನು ನೆರವೇರಿಸಿದ ಬಳಿಕ ಬೆಂಗಳೂರಿಗೆ ಪ್ರಥಮ ಬಾರಿಗೆ ಆಗಮಿಸಲಿದ್ದಾರೆ.
ಮಾರ್ಚ್ 14ರಂದು ನೈಸ್ ರಸ್ತೆಯಲ್ಲಿರುವ ಪಿಇಎಸ್ ಕಾಲೇಜಿನ ಸರ್ಕಲ್ನಿಂದ ದೊಡ್ಡಗಣೇಶ ದೇವಸ್ಥಾನದವರೆಗೆ ಬೈಕ್ ರ್ಯಾಲಿಯಲ್ಲಿ ಹಾಗೂ ದೊಡ್ಡಗಣೇಶನ ದೇವಸ್ಥಾನದಿಂದ ವಿದ್ಯಾಪೀಠದವರೆಗೆ ಮೆರವಣಿಗೆಯ ಮೂಲಕ ಶ್ರೀಗಳನ್ನು ಭವ್ಯವಾಗಿ ಸ್ವಾಗತಿಸಲಾಗುತ್ತದೆ
ಮೆರವಣಿಗೆಯ ಬಳಿಕ ಪೂರ್ಣ ಪ್ರಜ್ಞ ವಿದ್ಯಾಪೀಠದಲ್ಲಿ ಸಭಾ ಕಾರ್ಯಕ್ರಮವನ್ನು ಕೂಡಾ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನ ಬಿಜೆಪಿ ಶಾಸಕರು ಪೂರ್ವಭಾವಿ ಸಭೆ ನಡೆಸಿ ಕಾರ್ಯಕ್ರಮ ಆಯೋಜನೆ ಬಗ್ಗೆ ಚರ್ಚೆ ನಡೆಸಿದ್ದಾರೆ.
ಬಸವನಗುಡಿ ಶಾಸಕ ಎಲ್.ಎ. ರವಿ ಸುಬ್ರಮಣ್ಯ, ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ, ಚಿಕ್ಕಪೇಟೆ ಶಾಸಕ ಉದಯ ಗರುಡಾಚಾರ್ ಮತ್ತು ಮಾಜಿ ಸಚಿವ ಅರವಿಂದ ಲಿಂಬಾವಳಿ ಪಾಲ್ಗೊಂಡಿದ್ದರು.