ಚಿಕ್ಕಮಗಳೂರು: ಇಂದು ಮತ್ತು ನಾಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರವರು ಶೃಂಗೇರಿಗೆ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣವನ್ನು ಬಂದ್ ಮಾಡಲಾಗಿದ್ದು, ಜಿಲ್ಲಾಡಳಿತದ ಈ ನಡೆಗೆ ವ್ಯಾಪಾರಸ್ಥರು ಗರಂ ಆಗಿದ್ದಾರೆ.
ಶೃಂಗೇರಿ ಪಟ್ಟಣ ಬಂದ್ ಮಾಡುವಂತೆ ಆದೇಶ ಹೊರಡಿಸಿರುವ ಜಿಲ್ಲಾಡಳಿತಕ್ಕೆ ಎರಡು ದಿನದ ನಷ್ಟವನ್ನು ಭರಿಸುವಂತೆ ವ್ಯಾಪಾರಸ್ಥರು ಆಗ್ರಹಿಸುತ್ತಿದ್ದಾರೆ. ಜೊತೆಗೆ ಜಿಲ್ಲಾಡಳಿತ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೃಷಿ ಸಂಬಂಧಿತ ಕೆಲಸಗಳಿಗೂ ರೈತರು ಪಟ್ಟಣಕ್ಕೆ ಬಾರದಂತೆ ಸೂಚನೆ ನೀಡಿದ್ದಾರೆ. ಇನ್ನು ಕೊರೊನಾ ಹಿನ್ನೆಲೆ ಈಗಾಗಲೇ ವ್ಯಾಪಾರಸ್ಥರು ನಷ್ಟ ಅನುಭವಿಸುತ್ತಿದ್ದು, ನವರಾತ್ರಿ ಸಂದರ್ಭದಲ್ಲಿ ಮತ್ತೆ 2 ದಿನ ಅಂಗಡಿ ಮುಂಗಟ್ಟು ಮುಚ್ಚಲು ಜಿಲ್ಲಾಡಳಿತ ತಿಳಿಸಿದೆ. ಜಿಲ್ಲಾಡಳಿತದ ಈ ಆದೇಶಕ್ಕೆ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎರಡು ದಿನದ ನಷ್ಟವನ್ನು ಭರಿಸುವಂತೆ ಆಗ್ರಹಿಸಿದ್ದಾರೆ.