ಮಂಗಳೂರು: ರೈತ ಸಂಘಗಳ ಒಕ್ಕೂಟದ ಪದಾಧಿಕಾರಿ ಓಸ್ವಾಲ್ಡ್ ಫರ್ನಾಂಡಿಸ್, ‘ವಿದೇಶಗಳಿಂದ ಅಡಿಕೆ ಆಮದಾಗುತ್ತಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಧಾರಣೆ ತೀವ್ರ ಕುಸಿತ ಕಂಡಿದೆ. ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಅಡಿಕೆ ಅಮದು ನಿಷೇಧಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜಿಲ್ಲೆಯ ರೈತ ಸಂಘಗಳ ಒಕ್ಕೂಟವು ಇದೇ 7ರಂದು ಪ್ರತಿಭಟನಾ ಜಾಥಾ ಹಮ್ಮಿಕೊಳ್ಳಲಿದೆ’ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇದೇ 7ರಂದು ಮಧ್ಯಾಹ್ನ 2 ಗಂಟೆಗೆ ಬಿ.ಸಿ. ರೋಡ್ನಿಂದ ಜಾಥಾ ಹೊರಡಲಿದೆ. ನಗರದ ಜಿಲ್ಲಾಧಿಕಾರಿ ಕಚೇರಿವರೆಗೆ ಬೆಳೆಗಾರರು ಟ್ರ್ಯಾಕ್ಟರ್ ಮತ್ತಿತರ ವಾಹನಗಳಲ್ಲಿ ಸಾಗಿಬರಲಿದ್ದಾರೆ. ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಸಭೆ ನಡೆಸಲಿದ್ದೇವೆ’ ಎಂದರು.
‘ಅಡಿಕೆಯ ಎಲೆಚುಕ್ಕಿ ರೋಗ ಮತ್ತು ಹಳದಿ ಎಲೆ ರೋಗ ಮತ್ತು ತೆಂಗಿನ ಧಾರಣೆ ಕುಸಿತದಿಂದಾಗಿ ಸಮಸ್ಯೆಗೆ ಸಿಲುಕಿದ್ದೇವೆ. ಇದರ ಬೆನ್ನಲ್ಲೇ ಅಡಿಕೆ ಧಾರಣೆ ಕುಸಿತ ಉಂಟಾಗಿರುವುದು ನಮ್ಮನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ ಎಂದು ಅಳಲು ತೋಡಿಕೊಂಡರು. ದೆಹಲಿಯ ಗಡಿ ಪ್ರದೇಶದಲ್ಲಿ ಹೋರಾಟ ನಡೆಸುತ್ತಿರುವ ರೈತರ ಮೇಲಿನ ದೌರ್ಜನ್ಯವನ್ನು ಕೂಡಲೆ ನಿಲ್ಲಿಸಬೇಕು. ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದೂ ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಸನ್ನಿ ಡಿಸೋಜ, ಸದಸ್ಯ ಸಂಜೀವ ಸಫಲಿಗೆ ಭಾಗವಹಿಸಿದ್ದರು.